
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಪುಷ್ಯ ಮಳೆಯ ಅಬ್ಬರ ಮುಂದುವರಿದಿದ್ದು, ಜುಲೈ 23ರಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ರಾಯಚೂರು, ಕಲಬುರಗಿ ಸೇರಿದಂತೆ 20 ಜಿಲ್ಲೆಗಳಲ್ಲಿ ಗುರುವಾರ ಮಳೆಯ ಪ್ರಭಾವ ಹೆಚ್ಚಿರಲಿದೆ.
ಉಳಿದಂತೆ ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಈ ಭಾಗಗಳಿಗೆ ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ನೀಡಲಾಗಿಲ್ಲ. ಕರಾವಳಿ ಹಾಗೂ ಮಲೆನಾಡು ಭಾಗದ ನದಿ ತೀರದ ಜನತೆ ಎಚ್ಚರದಿಂದಿರಲು ಆಡಳಿತ ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII