


ಬಳ್ಳಾರಿ, 23 ಜುಲೈ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯು 2025 – 26ರ ಶೈಕ್ಷಣಿಕಸ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡಾ 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಸರ್ಕಾರಿ ನೌಕರರ 350 ಪ್ರತಿಭಾನ್ವಿತರಿಗೆ ‘ಪ್ರತಿಭಾ ಪುರಸ್ಕಾರ'ವನ್ನು ಜುಲೈ 26 ರ ಭಾನುವಾರ ಸಂಜೆ 04 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಪ್ರದಾನ ಮಾಡಲಾಗುತ್ತದೆ.
ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಭಾಗವಹಿಸುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಜನಹಳ್ಳಿ ಹರಿಹರದ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಡಾ. ಪ್ರಸನ್ನಾನಂದ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.
ಖ್ಯಾತ ವಾಗ್ಮಿ ಕುಮಾರಿ ಹರಿಕಾ ಮಂಜುನಾಥ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾತ್ಮಕ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಒಟ್ಟು 350 ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಲಿದ್ದಾರೆ. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ನಗದು, ಬ್ಯಾಗ್, ಶಾಲು ಹಾಗೂ ಪ್ರಮಾಣ ಪತ್ರ ನೀಡಿ ವೇದಿಕೆಯಲ್ಲಿ ಗೌರವಿಸಲಾಗುವುದು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿ ವರ್ಷವೂ ಈ ಪ್ರೇರಣಾದಾಯಿ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು, ಈವರೆಗೂ ರಾಜ್ಯಾದ್ಯಂತ 60,000ಕ್ಕೂ ಹೆಚ್ಚು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ. 2026ನೇ ಸಾಲಿನಲ್ಲಿ ಆನ್ಲೈನ್ ನೋಂದಣಿ ಮೂಲಕ ಆಯ್ಕೆಯಾದ ರಾಜ್ಯದಾದ್ಯಂತ ಸುಮಾರು 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಪುರಸ್ಕಾರ ದೊರೆಯಲಿದೆ.
ಈ ಸಮಾರಂಭದಲ್ಲಿ ರಾಜ್ಯ ಸಂಘದ ಪದಾಧಿಕಾರಿಗಳು, ವಿಜಯನಗರ, ದಾವಣಗೆರೆ, ಗದಗ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು ಹಾಗೂ ಬಳ್ಳಾರಿ-ರಾಯಚೂರು ಜಿಲ್ಲೆಗಳ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಮತ್ತು ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ ಎಂದು ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷರಾದ ಡಾ. ನೆಲ್ಕುದ್ರಿ ಸದಾನಂದ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್