
ನವ ದೆಹಲಿ, 24 ಜುಲೈ (ಹಿ.ಸ.):
ಆ್ಯಂಕರ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಸಿಬಿಎಸ್ಇ ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಜುಲೈ 25ರ ಶನಿವಾರ ಸಂಜೆ ದೇಶಾದ್ಯಂತ ಜಿಲ್ಲಾ ಮಟ್ಟದಲ್ಲಿ ಕ್ಯಾಂಡಲ್ ಮಾರ್ಚ್ ಮತ್ತು ಸತ್ಯಾಗ್ರಹ ಹಮ್ಮಿಕೊಂಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಪತ್ರದಲ್ಲಿ, ಪರೀಕ್ಷಾ ವ್ಯವಸ್ಥೆಯ ವೈಫಲ್ಯದಿಂದ ಭವಿಷ್ಯಕ್ಕೆ ಧಕ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಯುವಜನರ ಬೆಂಬಲಕ್ಕಾಗಿ ಈ ಸತ್ಯಾಗ್ರಹ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ರಾಜ್ಯ ಕಾಂಗ್ರೆಸ್ ಸಮಿತಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮದ ನೇತೃತ್ವ ವಹಿಸಬೇಕು ಎಂದು ಸೂಚಿಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ವಿವಿಧ ಘಟಕಗಳು, ವಿಭಾಗಗಳು, ಪ್ರಕೋಷ್ಟಗಳು ಹಾಗೂ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವಂತೆ ನಿರ್ದೇಶನ ನೀಡಲಾಗಿದೆ.
ಕ್ಯಾಂಡಲ್ ಮಾರ್ಚ್ ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳವರೆಗೆ ತೆರಳಿ ಅಲ್ಲಿ ಸತ್ಯಾಗ್ರಹದೊಂದಿಗೆ ಸಮಾಪ್ತಗೊಳ್ಳಲಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳು ಹಾಗೂ ಯುವಜನರೊಂದಿಗೆ ಕಾಂಗ್ರೆಸ್ನ ಐಕ್ಯತೆಯ ಸಂಕೇತವಾಗಿರಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮವನ್ನು ಶಾಂತಿಯುತ, ಶಿಸ್ತುಬದ್ಧ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಲಾಗಿದ್ದು, ವಿದ್ಯಾರ್ಥಿಗಳ ಪರ ಕಾಂಗ್ರೆಸ್ ನಿಂತಿದೆ ಹಾಗೂ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ವಿರೋಧಿಸುತ್ತದೆ ಎಂಬ ಸಂದೇಶ ಜನರಿಗೆ ತಲುಪುವಂತೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವಂತೆಯೂ ಪಕ್ಷ ಕಾರ್ಯಕರ್ತರಿಗೆ ನಿರ್ದೇಶನ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII