
ಬೆಂಗಳೂರು, 24 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರಾಜಕೀಯವಾಗಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿರುವ 'ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ', ಸಂಪುಟದಲ್ಲಿ ಎರಡು ಉಪಮುಖ್ಯಮಂತ್ರಿ ಸ್ಥಾನ ಹಾಗೂ ಕನಿಷ್ಠ ಹತ್ತು ಸಚಿವ ಸ್ಥಾನಗಳನ್ನು ನೀಡುವಂತೆ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಆರ್. ಮೇಟಿ ಮಾತನಾಡಿ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದ 14 ಜಿಲ್ಲೆಗಳ 96 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷದ 65ಕ್ಕೂ ಹೆಚ್ಚು ಶಾಸಕರು ಗೆಲುವು ಸಾಧಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ಈ ಭಾಗದ ಕೊಡುಗೆ ಅಪಾರವಿದ್ದರೂ, ಪ್ರಸ್ತುತ ಕೇವಲ ಐವರು ಶಾಸಕರಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳು ದಕ್ಷಿಣ ಕರ್ನಾಟಕದ ಪಾಲಾಗಿವೆ ಎಂದು ತಿಳಿಸಿದ ಅವರು, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್ ಹಾಗೂ ಈಶ್ವರ ಖಂಡ್ರೆ ಸೇರಿದಂತೆ ಹಿರಿಯ ನಾಯಕರಲ್ಲಿ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿರುವುದರಿಂದ ಕನಿಷ್ಠ ಮೂರು ಸಚಿವ ಸ್ಥಾನಗಳನ್ನು ಕಲ್ಪಿಸಬೇಕು ಮತ್ತು ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.
ಉತ್ತರ ನವ ನಿರ್ಮಾಣ ವೇದಿಕೆಯ ಗೌರವ ಅಧ್ಯಕ್ಷ ಬಸವರಾಜ ದಿಂಡೂರ ಹಾಗೂ ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಮಾತನಾಡಿ, ನಿರ್ದಿಷ್ಟ ಸಮುದಾಯಕ್ಕೆ ಸೀಮಿತಗೊಳಿಸದೆ, ಒಟ್ಟಾರೆ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಹಿರಿಯ ನಾಯಕರಿಗೆ ಉನ್ನತ ಹುದ್ದೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಬಸವರಾಜ ಬೀಳೂರು, ಎಂ.ವಿ. ನೆಗಳೂರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII