
ಬೆಂಗಳೂರು, 24 ಜುಲೈ (ಹಿ.ಸ.):
ಆ್ಯಂಕರ್:
ನೀಟ್ ಪರೀಕ್ಷಾ ವಿವಾದ, ವಿದ್ಯಾರ್ಥಿಗಳ ಪ್ರತಿಭಟನೆಗೆ ಕನ್ನಡ ಚಿತ್ರರಂಗದಿಂದ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಸಿಗುತ್ತಿಲ್ಲದಿರುವ ಬಗ್ಗೆ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ತೀವ್ರ ಬೇಸರ ಮತ್ತು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಾರ್ವಜನಿಕ ಸಮಸ್ಯೆಗಳು ಹಾಗೂ ವಿದ್ಯಾರ್ಥಿಗಳ ಪರವಾದ ಹೋರಾಟಗಳು ಬಂದಾಗ ಇಡೀ ಸ್ಯಾಂಡ್ವುಡ್ ಒಂದಾಗಿ ಧ್ವನಿ ಎತ್ತಬೇಕು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಕಮೆಂಟ್ಸ್ಗಳು ಬರಬಹುದು ಎಂಬ ಅಂಜಿಕೆಯಿಂದ ಕೆಲವೇ ಕೆಲವು ಮಂದಿಯನ್ನು ಹೊರತುಪಡಿಸಿ ಉಳಿದ ಸೆಲೆಬ್ರಿಟಿಗಳು ಮೌನ ವಹಿಸುವುದು ಸರಿಯಲ್ಲ ಎಂದು ಅವರು ಕಿಡಿಕಾರಿದ್ದಾರೆ.
ಇದೇ ವೇಳೆ, ಹಿಂದೆ ಮೇಕೆದಾಟು ವಿಚಾರದಲ್ಲೂ ಕೂಡ ಚಿತ್ರರಂಗದವರು ಯಾರೂ ಮುಂದೆ ಬರಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಮೇಲೆ ನಡೆದಿರುವ ಲಾಠಿಚಾರ್ಜ್ ಹಾಗೂ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ ಸಾಧು ಕೋಕಿಲ, ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯ ಸಿಗಬೇಕು, ಇಲ್ಲದಿದ್ದರೆ ಇದು ದೇಶಾದ್ಯಂತ ದೊಡ್ಡ ಪರಿಣಾಮ ಬೀಳಲಿದೆ ಎಂದು ಎಚ್ಚರಿಸಿದ್ದಾರೆ.
ಮುಂದಿನ ಪೀಳಿಗೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿರುವ ಈ ಗಂಭೀರ ವಿಚಾರದಲ್ಲಿ ಸರ್ಕಾರ ಕೂಡಲೇ ಸೂಕ್ತ ತೀರ್ಮಾನ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII