
ಬೆಂಗಳೂರು, 24 ಜುಲೈ (ಹಿ.ಸ.):
ಆ್ಯಂಕರ್:
ಸಚಿವ ಸಂಪುಟ ವಿಸ್ತರಣೆ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿರುವ ಬೆನ್ನಲ್ಲೇ, ತಮ್ಮ ಪುತ್ರಿ ನೀಡಿರುವ 2028ರ ಮುಖ್ಯಮಂತ್ರಿ ಹುದ್ದೆಯ ಹೇಳಿಕೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿ ಭೇಟಿ ಹಾಗೂ ಸಂಪುಟ ಬದಲಾವಣೆ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ಕ್ಕೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಮ್ಮ ಪುತ್ರಿ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಪ್ರತಿಯೊಬ್ಬರಿಗೂ ತಮ್ಮದೇ ಆದ ವೈಯಕ್ತಿಕ ಅಭಿಪ್ರಾಯಗಳನ್ನು ಹಾಗೂ ಆಶೋತ್ತರಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಆದರೆ, ಭವಿಷ್ಯದ ಮುಖ್ಯಮಂತ್ರಿ ಹುದ್ದೆ ಅಥವಾ 2028ರ ರಾಜಕೀಯ ಪರಿಸ್ಥಿತಿಯ ಬಗ್ಗೆ ಈಗಲೇ ಮಾತನಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಜವಾಬ್ದಾರಿಗಳು ಹಾಗೂ ಪಕ್ಷದ ಸಂಘಟನೆಯೇ ಮುಖ್ಯವೇ ಹೊರತು, ಭವಿಷ್ಯದ ಊಹೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ನುಡಿದರು. ರಾಜಕೀಯ ಬೆಳವಣಿಗೆಗಳು ಮತ್ತು ಪಕ್ಷದ ವರಿಷ್ಠರ ಅಂತಿಮ ನಿರ್ಧಾರದ ಮೇಲೆಯೇ ಎಲ್ಲವೂ ನಿಂತಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಅಲ್ಲದೇ ಬೆಳಗಾವಿ ಭಾಗದಿಂದ ಕೆಲವರಿಗೆ ಸಚಿವ ಸ್ಥಾನ ನೀಡಬೇಕು ಅಥವಾ ನೀಡಬಾರದು ಎಂಬ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವುದು ಸಹಜ ಎಂದರು.
ಬೆಂಬಲಿಗರು ತಮ್ಮ ನಾಯಕರ ಪರವಾಗಿ ದೊಡ್ಡ ಮಟ್ಟದಲ್ಲಿ ಬೇಡಿಕೆಗಳನ್ನು ಮಂಡಿಸುವುದು ಸಾಮಾನ್ಯವಾದರೂ, ಅಂತಿಮವಾಗಿ ಪಕ್ಷಕ್ಕೆ ಯಾರು ಅನಿವಾರ್ಯ ಹಾಗೂ ಅರ್ಹರು ಎಂಬುದನ್ನು ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಂಪೂರ್ಣ ಅಧಿಕಾರ ಪಕ್ಷದ ಹೈಕಮಾಂಡ್ಗೆ ಸೇರಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII