

ಕೊಪ್ಪಳ , 25 ಜುಲೈ (ಹಿ.ಸ.):
ಆ್ಯಂಕರ್ : ಆಧುನಿಕ ಬದುಕಿನ ಒತ್ತಡದಲ್ಲಿರುವ ಪ್ರತಿಯೊಬ್ಬ ಮಹಿಳೆ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಕೊಪ್ಪಳ ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕ ಮಹೇಶ್ ಕರೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಕೊಪ್ಪಳ ತಾಲೂಕ ಪಂಚಾಯತಿ ವತಿಯಿಂದ ಕೊಪ್ಪಳ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ಮಹಿಳಾ ನೌಕರರು ಮತ್ತು ಸಿಬ್ಬಂದಿಗಳಿಗೆ ಮುಟ್ಟಿನ ಕಪ್ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆಲಸದ ಒತ್ತಡದಲ್ಲಿರುವ ನಾವುಗಳು ಆರೋಗ್ಯದ ಬಗ್ಗೆ ಗಮನಹರಿಸದಿರುವದರಿಂದ ದೇಹದ ಆರೋಗ್ಯದಲ್ಲಿ ಏರುಪೇರುಗಳು ಆಗುತ್ತಿವೆ. ಮಾಸಿಕ ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾ ಪಂಚಾಯತಿಯಿಂದ ವಿತರಿಸಲಾದ ಮುಟ್ಟಿನ ಕಪ್ ಸಹಕಾರಿಯಾಗಲಿವೆ ಎಂದರು. ಪಂಚಾಯತ್ ರಾಜ್ ಆಯುಕ್ತಾಲಯದಿಂದ ಇಂತಹ ನಿರ್ಣಯ ಕೈಗೊಂಡು ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿರುವದು ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.
ಜಿಲ್ಲಾ ಪಂಚಾಯತಿಯ ಸ್ಯಾನಿಟೇಶನ್ ಮತ್ತು ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಮಾತನಾಡಿ, ಮುಟ್ಟಿನ ಸಮಯದಲ್ಲಿ ಮಾಸಿಕ ಋತುಚಕ್ರ ನಿರ್ವಹಣೆ, ಶುಚಿಯಾದ ಬಟ್ಟೆ ಬಳಕೆ ಹಾಗು ಸ್ಯಾನಿಟರಿ ಪ್ಯಾಡ್ ಬಳಕೆಯಿಂದ ಆಗುವ ಅನುಕೂಲಗಳು, ವೈಯಕ್ತಿಕ ಶುಚಿತ್ವ ಕುರಿತು ಮಹತ್ವದ ಮಾಹಿತಿ ನೀಡಿದರು. ಮಹಿಳೆಯರ ವೈಯಕ್ತಿಕ ಶುಚಿತ್ವ ಹಾಗೂ ಸ್ಯಾನಿಟರಿ ಪ್ಯಾಡ್ಗಳ ಬಳಕೆ ಹಾಗೂ ಬಳಸಿದ ಪ್ಯಾಡ್ ಗಳನ್ನು ಇನ್ಸಿನರೇಟರ್ ಮೂಲಕ ವೈಜ್ಞಾನಿಕ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ನಾವು ಆರೋಗ್ಯದ ಬಗ್ಗೆ ಕಾಳಜಿವಹಿಸದೇ ಇರುವುದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇವೆ. ಮುಟ್ಟನ್ನು ಗುಟ್ಟನ್ನಾಗಿಸದೇ ಮುಟ್ಟನ್ನು ಒಗ್ಗೂಡಿಕೊಂಡು ಆರೋಗ್ಯದ ಬದಲಾವಣೆಗೆ ಮುನ್ನುಡಿ ಬರೆಯೋಣ ಎಂದು ಕರೆ ನೀಡಿದರು. ಮಹಿಳೆಯರು ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬಳಕೆಯಾದ ಪ್ಯಾಡ್ಗಳನ್ನು ಸಂಗ್ರಹಿಸಿ ವೈಜ್ಞಾನಿಕ ನಿರ್ವಹಣೆ ಮಾಡಲು ಇನ್ಸಿನರೇಟರ್ ಅಳವಡಿಸಲಾಗುತ್ತಿದ್ದು, ಎಲ್ಲಾ ಮಹಿಳೆಯರು ಅವುಗಳಿಗೆ ನೀಡಬೇಕು.
ಎಲ್ಲಿ ಬೇಕಾದಲ್ಲಿ ಬಿಸಾಡದೇ ಗ್ರಾಮ ಪಂಚಾಯತಿ ವಾಹನಕ್ಕೆ ನೀಡಬೇಕು ಅಥವಾ ನಿಗದಿಪಡಿಸಿದ ಸ್ಥಳದಲ್ಲಿ ಅವುಗಳನ್ನು ವಿಲೇವಾರಿ ಮಾಡತಕ್ಕದ್ದು. ಬಯಲು ಶೌಚಕ್ಕೆ ಹೋಗುವುದರಿಂದ ಅನೇಕ ರೋಗಗಳು ಹರಡುವ ಸಾಧ್ಯತೆ ಶೇ.80 ರಷ್ಟು ಇರುವುದರಿಂದ ನಿಮ್ಮ ಸುತ್ತ-ಮುತ್ತಲಿನ ಜನರಿಗೆ ಅರಿವು ಮೂಡಿಸಬೇಕೆಂದರು. ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ವಾಹನಕ್ಕೆ ನೀಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿಯ ವಿಬಿ ಜಿ ರಾಮ್ ಜೀ ಯೋಜನೆಯ ಸಹಾಯಕ ನಿರ್ದೇಶಕಿ ಸೌಮ್ಯ ಕೆ, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ಸಂಜೀವಿನಿ ಯೋಜನೆಯ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ಮಹಿಳಾ ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ತಾಲೂಕ ಪಂಚಾಯತಿಯ ಮಹಿಳಾ ನೌಕರರು, ಸಂಜಿವಿನಿ ಯೋಜನೆಯ ಮಹಿಳಾ ಸದಸ್ಯರು, ಗ್ರಾಮ ಕಾಯಕ ಮಿತ್ರರು, ಅಂಗವಿಕಲ ಪುನರ್ವಸತಿ ಮಹಿಳಾ ಕಾರ್ಯಕರ್ತರು, ವಿವಿಧ ಇಲಾಖೆಗಳ ಮಹಿಳಾ ನೌಕರರು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್