
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ದಕ್ಷಿಣ ಮತ್ತು ಪಶ್ಚಿಮ ನಗರ ಪಾಲಿಕೆಗಳ ಯಾಂತ್ರಿಕ ರಸ್ತೆ ಸ್ವಚ್ಛತಾ (ಮೆಕ್ಯಾನಿಕಲ್ ಸ್ವೀಪರ್ಸ್) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನಗರಾಭಿವೃದ್ಧಿ ಸಚಿವರನ್ನು ಅವರನ್ನು ಉದ್ದೇಶಿಸಿ, ಟೆಂಡರ್ ಪ್ರಕ್ರಿಯೆಯಲ್ಲಿ ಅರ್ಹತಾ ಮಾನದಂಡಗಳನ್ನು ಉದ್ದೇಶಪೂರ್ವಕವಾಗಿ ಸಡಿಲಗೊಳಿಸಿ ನಿರ್ದಿಷ್ಟ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ನಡೆದಿದೆ ಎಂದು ದೂರಿದರು.
ಉತ್ತರ, ಪೂರ್ವ ಮತ್ತು ಕೇಂದ್ರ ವಲಯಗಳ ಪಾಲಿಕೆಗಳಲ್ಲಿ ಒಂದು ರೀತಿಯ ಅರ್ಹತಾ ನಿಯಮಗಳನ್ನು ಅನುಸರಿಸಲಾಗಿದ್ದು, ದಕ್ಷಿಣ ಹಾಗೂ ಪಶ್ಚಿಮ ವಲಯಗಳಲ್ಲಿ ಮಾತ್ರ ಅವುಗಳನ್ನು ಬದಲಾಯಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ರಸ್ತೆ ಸ್ವಚ್ಛಗೊಳಿಸುವ ಅನುಭವದ ಬದಲಿಗೆ ದ್ರವ ತ್ಯಾಜ್ಯ ಅಥವಾ ಚರಂಡಿ ನಿರ್ವಹಣೆಯ ಅನುಭವವನ್ನು ಪರಿಗಣಿಸಿರುವುದು ತಾಂತ್ರಿಕವಾಗಿ ಸಮರ್ಥನೀಯವಲ್ಲ ಎಂದು ಪ್ರಶ್ನಿಸಿದರು.
ರಾಜ್ಯ ಖರೀದಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ನಿಯಮಗಳನ್ನು ಉಲ್ಲಂಘಿಸಿ ಟೆಂಡರ್ ರೂಪಿಸಲಾಗಿದೆ ಎಂದು ಆರೋಪಿಸಿದ ಅಶೋಕ, ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಿ ಅರ್ಹ ಹಾಗೂ ಅನುಭವ ಹೊಂದಿರುವ ಸಂಸ್ಥೆಗಳಿಗೆ ಅವಕಾಶ ಕಲ್ಪಿಸುವಂತೆ ಪಾರದರ್ಶಕ ಹೊಸ ಟೆಂಡರ್ ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.