
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ, ಕೆಪಿಎಸ್ಸಿ ಭ್ರಷ್ಟಾಚಾರ ಹಗರಣ ಹಾಗೂ ಮೇಕೆದಾಟು ಯೋಜನೆ ವಿಳಂಬ ಧೋರಣೆಗಳ ವಿರುದ್ಧ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ. ಆಗಸ್ಟ್ 13ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಪ್ರಮುಖ ಜನಪರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸರ್ಕಾರದ ಬಣ್ಣ ಬಯಲು ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ಅನುಮತಿಯ ಅಗತ್ಯವಿಲ್ಲ ಎಂದಿದ್ದರೂ, ರಾಜ್ಯ ಸರ್ಕಾರ ಕೇವಲ ರಾಜಕಾರಣ ಮಾಡುತ್ತಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗುದ್ದಲಿ ಪೂಜೆ ಮಾಡಲು ಯಾಕೆ ಹಿಂದೇಟು ಎಂದು ವ್ಯಂಗ್ಯವಾಡಿದರು.
ನಾಳೆಯಿಂದ ತಾವೇ ಮುಖ್ಯಮಂತ್ರಿಗಳ ತವರು ಜಿಲ್ಲೆಯಿಂದಲೇ ಪ್ರವಾಸ ಆರಂಭಿಸಿ, ಶಿಂಶಾ ನದಿ ನೀರು ಹಾಗೂ ವಿದ್ಯುತ್ ಘಟಕದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ತಯಾರಿಸುವುದಾಗಿ ತಿಳಿಸಿದರು.
ಇದೇ ವೇಳೆ, ಆಗಸ್ಟ್ 13ರಿಂದ ಆರಂಭವಾಗಲಿರುವ ಅಧಿವೇಶನವನ್ನು ಕೇವಲ 10 ದಿನಗಳಿಗೆ ಸೀಮಿತಗೊಳಿಸಿ ಸರ್ಕಾರ ಚರ್ಚೆಯಿಂದ ನುಣುಚಿಕೊಳ್ಳಲು ನೋಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ, ಕೆಪಿಎಸ್ಸಿ ನೇಮಕಾತಿ ಹಗರಣ, ವಿವಿಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಲಂಚಾವತಾರ ಹಾಗೂ ಸ್ವಯಾರ್ಜಿತ ಆಸ್ತಿಗಳ ಮೇಲಿನ ಹೊಸ ನಿಯಮದ ವಿರುದ್ಧದ ಬಗ್ಗೆ ಸದನದಲ್ಲಿ ಸರ್ಕಾರದ ಉತ್ತರ ಕೋರಲಾಗುವುದು ಎಂದು ಎಚ್ಚರಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII