
ಬೆಂಗಳೂರು, 07 ಜುಲೈ (ಹಿ.ಸ.):
ಆ್ಯಂಕರ್:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ರಾಜಕೀಯ, ಆಡಳಿತ ಹಾಗೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಸಭೆಯಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಪ್ರತಿಪಕ್ಷದ ನಾಯಕರಾಗಿ ಜವಾಬ್ದಾರಿ ವಹಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದ ಸೋನಿಯಾ ಗಾಂಧಿ ಅವರಿಗೂ ಸಭೆ ಅಭಿನಂದನೆ ವ್ಯಕ್ತಪಡಿಸಿತು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ನೇಮಕಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ನೇಮಕಾತಿಗೆ ಕಾರಣರಾದ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ಸಭೆ ಅಭಿನಂದನೆ ತಿಳಿಸಿತು.
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ಹಾಗೂ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ ಕಾಂಗ್ರೆಸ್ ನಾಯಕತ್ವಕ್ಕೆ ಸಭೆ ಕೃತಜ್ಞತೆ ಸಲ್ಲಿಸಿತು. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರ ನಾಯಕತ್ವವನ್ನು ಸಭೆ ಶ್ಲಾಘಿಸಿತು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ₹10,000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಭೆ ಒತ್ತಾಯಿಸಿತು.
ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ದುರ್ಬಳಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ ಸಭೆ, ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬ ನಿರ್ಣಯವನ್ನೂ ಅಂಗೀಕರಿಸಿತು.
ಸಭೆಯಲ್ಲಿ ಎಲ್ಲಾ ನಿರ್ಣಯಗಳು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಕ್ಸನಲ್ಲಿ ಮಾಹಿತಿ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.