
ಬೆಂಗಳೂರು, 08 ಜುಲೈ (ಹಿ.ಸ.):
ಆ್ಯಂಕರ್:
ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೆಚ್ಎಎಲ್, ವೈಟ್ ಪೀಲ್ಡ್ ಹಾಗೂ ಕೆ.ಆರ್. ಪುರ ವಿಭಾಗಗಳಲ್ಲಿ ಬುಧವಾರ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿಗಳನ್ನು ತೆರವುಗೊಳಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ಕಾರ್ಯಾಚರಣೆಯ ವೇಳೆ ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಆಕ್ರಮಿಸಿಕೊಂಡಿದ್ದ ಕಟ್ಟಡಗಳ ವಿಸ್ತರಣೆಗೆ, ತಾತ್ಕಾಲಿಕ ನಿರ್ಮಾಣಕ್ಕೆ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಒತ್ತುವರಿ ಸ್ಥರಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ನಡಿಗೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಕಾರ್ಯಾಚರಣೆಯನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ಹಮ್ಮಿಕೊಂಡಿದ್ದು, ಪಾದಚಾರಿ ಮಾರ್ಗಗಳು ಪಾದಚಾರಿಗಳ ಬಳಕೆಗಾಗಿ ಮಾತ್ರ ಮೀಸಲಾಗಿರುವುದರಿಂದ ಅವುಗಳನ್ನು ಒತ್ತುವರಿಯಿಂದ ಮುಕ್ತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / SNEHA K