
ವಿಜಯಪುರ, 08 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸುಕ್ಷೇತ್ರ ಸೋಮದೇವರ ಹಟ್ಟಿಯಲ್ಲಿ ನಡೆಯಲಿರುವ ಶ್ರೀ ಮಾತಾ ದುರ್ಗಾದೇವಿ ಜಾತ್ರಾ ಮಹೋತ್ಸವವು ಈ ಬಾರಿ ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದ್ದು, ಜುಲೈ 15, 2026ರಂದು ಖ್ಯಾತ ಹಿಂದಿ ಚಿತ್ರನಟ ಕುಮಾರ್ ಗೋವಿಂದ್ ಅವರು ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ವಿಮಲ್ ರಾಥೋಡ್ ತಿಳಿಸಿದರು.
ಧಾರ್ಮಿಕ ಸಂಪ್ರದಾಯ, ಭಕ್ತಿ ಮತ್ತು ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಶ್ರೀ ಮಾತಾ ದುರ್ಗಾದೇವಿ ಜಾತ್ರೆಗೆ ಪ್ರತಿ ವರ್ಷ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಾರೆ. ಈ ಬಾರಿ ಚಿತ್ರರಂಗದ ಜನಪ್ರಿಯ ನಟ ಕುಮಾರ್ ಗೋವಿಂದ್ ಅವರ ಆಗಮನದಿಂದ ಜಾತ್ರೆಯ ಸಂಭ್ರಮ ಮತ್ತಷ್ಟು ಹೆಚ್ಚಲಿದ್ದು, ಭಕ್ತರು ಹಾಗೂ ಅಭಿಮಾನಿಗಳಲ್ಲಿ ಅಪಾರ ಉತ್ಸಾಹ ಮನೆ ಮಾಡಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು, ದೇವಿಯ ಉತ್ಸವ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಭಕ್ತಿಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳ ಜೊತೆಗೆ ನೆರೆಯ ಜಿಲ್ಲೆಗಳು ಹಾಗೂ ರಾಜ್ಯಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಜಾತ್ರಾ ಸಮಿತಿಯವರು ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಭಕ್ತರಿಗೆ ಅಗತ್ಯ ಮೂಲಸೌಕರ್ಯ, ಕುಡಿಯುವ ನೀರು, ವಾಹನ ನಿಲುಗಡೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜಾತ್ರೆ ಶಾಂತಿಯುತ ಹಾಗೂ ವಿಜೃಂಭಣೆಯಿಂದ ನಡೆಯಲು ಪೊಲೀಸ್ ಇಲಾಖೆ ಮತ್ತು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಖ್ಯಾತ ನಟ ಕುಮಾರ್ ಗೋವಿಂದ್ ಅವರ ಉಪಸ್ಥಿತಿ ಧಾರ್ಮಿಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸಾರ್ವಜನಿಕರು, ಭಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಆಶೀರ್ವಾದ ಪಡೆಯುವ ಜೊತೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಾತ್ರಾ ಮಹೋತ್ಸವದ ಆಯೋಜಕರು ಮನವಿ ಮಾಡಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande