
ಬೆಂಗಳೂರು, 10 ಆಗಸ್ಟ್ (ಹಿ.ಸ.):
ಆ್ಯಂಕರ್:
ರೈತರ ವಿರೋಧದ ನಡುವೆ ಬಿಡದಿ ಟೌನ್ಶಿಪ್ ಯೋಜನೆ ಜಾರಿಗೊಳಿಸಬೇಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಬಿಡದಿಯ ಬಿಜಿಎಸ್ ವೃತ್ತದಿಂದ ಆರಂಭವಾದ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಟೌನ್ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಸುಮಾರು 9,600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಬಡ ರೈತರಿಗೆ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಲವಂತದ ಭೂಸ್ವಾಧೀನ ಮಾಡುವುದಿಲ್ಲ ಎಂದು ಹೇಳುತ್ತಲೇ, ಭೂಮಿಯ ಬೆಲೆ ಹೆಚ್ಚಿಸಿ ಆಮಿಷವೊಡ್ಡಲಾಗುತ್ತಿದೆ. ರೈತರ ಸಣ್ಣ ಜಮೀನುಗಳನ್ನು ಕಸಿದುಕೊಂಡು ಯಾರ ಓಲೈಕೆಗಾಗಿ ಟೌನ್ಶಿಪ್ ನಿರ್ಮಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಈಗಾಗಲೇ ಸಾವಿರಾರು ನಿವೇಶನಗಳು ಮತ್ತು ಮನೆಗಳು ಖಾಲಿ ಇದ್ದು, ಅವುಗಳಿಗೆ ಖರೀದಿದಾರರಿಲ್ಲ. ಈ ಅಂಕಿಅಂಶಗಳನ್ನು ಪರಿಶೀಲಿಸಿದ ಬಳಿಕವೇ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ, ಬಿಡದಿ ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ಕೈಬಿಡುವಂತೆ ಮನವಿ ಮಾಡಿದರು. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಅಭಿನಂದಿಸಿದ ಅವರು, ಕೇಂದ್ರ ಸಚಿವರಾಗಿದ್ದರೂ ಎಚ್.ಡಿ. ಕುಮಾರಸ್ವಾಮಿ ರೈತರ ಪರವಾಗಿ ಗಟ್ಟಿಯಾಗಿ ನಿಂತಿದ್ದಾರೆ ಎಂದರು.
“ನನಗೆ ವಯಸ್ಸಾಗಿದೆಯೇ ಹೊರತು ನನ್ನ ಬುದ್ಧಿಗೆ ವಯಸ್ಸಾಗಿಲ್ಲ. ಇಳಿವಯಸ್ಸಿನಲ್ಲೂ ರೈತರ ಪರವಾಗಿ ಹೋರಾಡುವ ಶಕ್ತಿ ನನಗಿದೆ. ಬಿಡದಿಯ ಕಿಂಚಿತ್ತೂ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡುವುದಿಲ್ಲ” ಎಂದು ದೇವೇಗೌಡ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.