
ಬೆಂಗಳೂರು, 10 ಆಗಸ್ಟ್ (ಹಿ.ಸ.):
ಆ್ಯಂಕರ್:
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ರೈತರು ಭಾಗವಹಿಸಿಲ್ಲ. ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಈ ಹೋರಾಟ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳ ಹಕ್ಕು. ಅದನ್ನು ಪ್ರಶ್ನಿಸುವುದಿಲ್ಲ ಎಂದರು.
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ, ಹಿಂದಿನ ಸರ್ಕಾರ ರೂಪಿಸಿದ ಯೋಜನೆಯನ್ನೇ ತಮ್ಮ ಸರ್ಕಾರ ಮುಂದುವರಿಸಿದೆ. ರೈತರಿಗೆ ಹಿಂದೆ ₹25 ಲಕ್ಷ ಪರಿಹಾರ ನೀಡುವುದಾಗಿ ಹೇಳಲಾಗಿತ್ತು. ಆದರೆ ತಮ್ಮ ಸರ್ಕಾರ ₹2.50 ಕೋಟಿಯಿಂದ ₹3 ಕೋಟಿವರೆಗೆ ಪರಿಹಾರ ನೀಡುತ್ತಿದೆ ಎಂದು ತಿಳಿಸಿದರು.
ನೈಸ್ ಹಾಗೂ ಬಿಡದಿ ಟೌನ್ಶಿಪ್ ಯೋಜನೆಗಳಿಗೆ ಸಹಿ ಹಾಕಿದ್ದು ಜೆಡಿಎಸ್ ನಾಯಕರೇ ಎಂದು ಶಿವಕುಮಾರ್ ಹೇಳಿದರು. ನೈಸ್ ಯೋಜನೆಯಿಂದ ರಸ್ತೆ ನಿರ್ಮಾಣವಾಗಿ ಬೆಂಗಳೂರಿಗೆ ಅನುಕೂಲವಾಗಿದೆ. ಯೋಜನೆಯಲ್ಲಿ ಸ್ವಾರ್ಥವಿದ್ದ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುವುದಾಗಿ ತಿಳಿಸಿದರು.
ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ
ಸಚಿವರಿಗೆ ಖಾತೆ ಹಂಚಿಕೆ ಕುರಿತು ಶನಿವಾರ ಸಂಜೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಬಂದಿದ್ದೇನೆ. ಬಹುಶಃ ಸೋಮವಾರ ಸಂಜೆ ವೇಳೆಗೆ ಖಾತೆ ಹಂಚಿಕೆ ವಿಚಾರ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.