
ಗದಗ, 12 ಆಗಸ್ಟ್ (ಹಿ.ಸ.)
ಆ್ಯಂಕರ್:- 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ರೈತರಿಗೆ ಕೃಷಿ ಇಲಾಖೆ ಸಲಹೆ ನೀಡಿದೆ.
ಪ್ರಸಕ್ತ ಸಾಲಿನಲ್ಲಿ ಗದಗ ಜಿಲ್ಲೆಗೆ ಇಂಡಸ್ಇಂಡ್ ಜನರಲ್ ಇನ್ಸೂರೆನ್ಸ್ ಕಂಪನಿಯನ್ನು ಅನುಷ್ಠಾನ ವಿಮಾ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದೆ. ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಬೆಳೆ ಸಾಲ ಪಡೆಯದ ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವುದು ಐಚ್ಛಿಕವಾಗಿರುತ್ತದೆ.
ರೈತರು ಬೆಳೆ ವಿಮೆ ನೋಂದಣಿಗೆ ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ನೋಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಆಗಸ್ಟ್ 14 ಕೊನೆಯ ದಿನಾಂಕ
2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಸೂರ್ಯಕಾಂತಿ (ಮಳೆ ಆಶ್ರಿತ ಮತ್ತು ನೀರಾವರಿ), ಕೆಂಪು ಮೆಣಸಿನಕಾಯಿ (ಮಳೆ ಆಶ್ರಿತ) ಹಾಗೂ ಈರುಳ್ಳಿ (ಮಳೆ ಆಶ್ರಿತ) ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಆಗಸ್ಟ್ 14, 2026 ಕೊನೆಯ ದಿನವಾಗಿದೆ.
ಆದ್ದರಿಂದ ಈ ಬೆಳೆಗಳನ್ನು ಬೆಳೆಯುತ್ತಿರುವ ಹಾಗೂ ಬೆಳೆ ವಿಮೆ ಮಾಡಿಸಿಕೊಳ್ಳಲು ಇಚ್ಛಿಸುವ ರೈತರು ಕೊನೆಯ ದಿನಾಂಕದವರೆಗೆ ಕಾಯದೆ, ಕೂಡಲೇ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.
ಪ್ರಕೃತಿ ವಿಕೋಪ, ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ಹಾನಿಯಾದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸುವಲ್ಲಿ ಬೆಳೆ ವಿಮೆ ಯೋಜನೆ ನೆರವಾಗಲಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP