
ಕೊಪ್ಪಳ, 13 ಆಗಸ್ಟ್ (ಹಿ.ಸ.)
ಆ್ಯಂಕರ್: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ಉದ್ದೇಶದಿಂದ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿಜಿ ರಾಮ್ ಜೀ ಯೋಜನೆಯಡಿ ಬುಡಶೆಟ್ನಾಳ ಕೆರೆ ಪುನಶ್ಚೇತನ ಕಾಮಗಾರಿ ಕೈಗೊಳ್ಳಲಾಗಿದೆ.
ಕಲಕೇರಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಅವರು ಮಾತನಾಡಿ, ಗ್ರಾಮೀಣ ಭಾಗದ ಕೂಲಿಕಾರರು ಗುಳೆ ಹೋಗುವುದನ್ನು ತಡೆಯಲು ಪ್ರತಿ ಕುಟುಂಬಕ್ಕೆ ಸ್ಥಳೀಯವಾಗಿ 125 ದಿನಗಳ ಕೂಲಿ ಕೆಲಸ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಯೋಜನೆಯಡಿ ಸಾಮುದಾಯಿಕ ಹಾಗೂ ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನಿಗದಿಪಡಿಸಲಾಗಿದೆ. ಜಲ ಸಂರಕ್ಷಣೆ, ನೀರಾವರಿ, ಅಂತರ್ಜಲ ಮರುಪೂರಣ, ಜಲಾನಯನ ಪ್ರದೇಶದ ಅಭಿವೃದ್ಧಿ ಹಾಗೂ ಜಲಮೂಲಗಳ ಪುನಶ್ಚೇತನ ಸೇರಿದಂತೆ ವಿವಿಧ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. “ವಿಕಸಿತ ಗ್ರಾಮ ಪಂಚಾಯತಿಯಿಂದ ವಿಕಸಿತ ಭಾರತದೆಡೆಗೆ” ಎಂಬ ಆಶಯದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ವಿಬಿಜಿರಾಮ್ ಜೀ ಯೋಜನೆಯ ಪ್ರತಿಯೊಂದು ಹಂತವನ್ನು ಆನ್ಲೈನ್ ಹಾಗೂ ಪಾರದರ್ಶಕ ವ್ಯವಸ್ಥೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಕೂಲಿಕಾರರು ಯೋಜನೆಯ ಕುರಿತು ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಇದರ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು. ಪ್ರಸಕ್ತ ಪ್ರತಿ ಮಾನವ ದಿನಕ್ಕೆ ರೂ.382 ಕೂಲಿ ನಿಗದಿಪಡಿಸಲಾಗಿದ್ದು, ಕೂಲಿಕಾರರು ಅಳತೆಗೆ ಅನುಗುಣವಾಗಿ ಕೆಲಸ ನಿರ್ವಹಿಸಿದಲ್ಲಿ ಅದರ ಆಧಾರದ ಮೇಲೆ ಕೂಲಿ ಪಾವತಿಸಲಾಗುತ್ತದೆ ಎಂದು ತಿಳಿಸಿದರು.
ಕೂಲಿಕಾರರೊಂದಿಗೆ ಸಂವಾದ: ಕೆರೆ ಪುನಶ್ಚೇತನ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿಕಾರರೊಂದಿಗೆ ತಾಲೂಕು ಐಇಸಿ ಸಂಯೋಜಕರು ಸಂವಾದ ನಡೆಸಿ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದರು. ಬಳಿಕ ಕಾಮಗಾರಿಗೆ ಹಾಜರಾಗಿದ್ದ ಕೂಲಿಕಾರರ ಎನ್.ಎಂ.ಎಂ.ಎಸ್ ಹಾಜರಾತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಬಿಎಪ್ಟಿ ಮಾರುತಿ, ಗ್ರಾಮ ಕಾಯಕ ಮಿತ್ರ ರಾಧಾ, ತಾಂಡಾ ರೋಜಗಾರ್ ಮಿತ್ರ ಯಮನೂರಪ್ಪ ಕಾರಬಾರಿ ಹಾಗೂ ಕಾಯಕ ಬಂಧುಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್