



ಕೊಪ್ಪಳ , 15 ಆಗಸ್ಟ್ (ಹಿ.ಸ.):
ಆ್ಯಂಕರ್ : ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರವು ಮಹತ್ವದ 45 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದ ರಾಜ್ಯದ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ದೊರೆಯುವದರೊಂದಿಗೆ ಆರ್ಥಿಕವಾಗಿ, ಸಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಯೋಜನೆಗಳು ವರದಾನವಾಗಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
80ನೇ ಸ್ವಾತಂತ್ರ್ಯೋತ್ಸವ ದನಾಚರಣೆಯ ಅಂಗವಾಗಿ ಶನಿವಾರದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸುಮಾರು 45 ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಅದರಲ್ಲಿ ಪ್ರಮುಖವಾದ ರೈತ ಮಿತ್ರ, ಗ್ರಾಮಾನುಭವ, ಭಾರತ ಜೋಡೋ ಯುವಕ ಸಂಘ, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರೀಡ್ ಮಿಷನ್, ತೇಗದ ಸಿರಿ ಇಂತಹ ಯೋಜನೆಗಳ ಮೂಲಕ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರೀಷ್ಕರಣೆ ಅಂಗವಾಗಿ ಚುನಾವಣಾ ಆಯೋಗದಿಂದ ಮತದಾರರಿಗೆ ಸಲ್ಲಿಸಲು ಕಡ್ಡಾಯಗೊಳಿಸಲಾದ 11 ದಾಖಲೆಗಳ ಪಟ್ಟಿಯಲ್ಲಿ ಒಂದಾದ ಜಾತಿ ಪ್ರಮಾಣ ಪತ್ರಗಳನ್ನು ಫಲಾನುಭವಿಗಳ ಮನೆ ಮನೆಗೆ ತಲುಪಿಸುವ ಮಹತ್ತರವಾದ ಕಾರ್ಯವನ್ನು ನಮ್ಮ ಸರ್ಕಾರ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ಒಟ್ಟು 15,19,108 ಜಾತಿ ಪ್ರಮಾಣ ಪತ್ರಗಳು ಇದ್ದು, ಇವುಗಳಲ್ಲಿ ಇದುವರೆಗೂ 12,34,447 ಪ್ರಮಾಣಪತ್ರಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಕಾರ್ಯವನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಸಮಾಧಾನದ ಪರಿಹಾರ ನೀಡುವುದು ಸರ್ಕಾರದ ಆದ್ಯತೆ ಆಗಿದೆ. ಅದರಂತೆ ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಪ್ರಜಾಸೇವಾ ಇಲಾಖೆಯ ಕಾರ್ಯಗಳ ಬಗ್ಗೆ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಶಾಲಾ, ಕಾಲೇಜು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿದರು. ಎಲ್ಲರ ಗಮನ ಸೆಳೆದ ವಿದ್ಯಾರ್ಥಿಗಳಿಗೆ ಮತ್ತು ಪಥಸಂಚಲನದಲ್ಲಿ ಭಾಗವಹಿಸಿದ ತಂಡಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ, ಸನ್ಮಾನಿಸಲಾಯಿತು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಡಿಎಫ್ಒ ನಿರ್ಮಲಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್