

ಕೊಪ್ಪಳ, 15 ಆಗಸ್ಟ್ (ಹಿ.ಸ.)
ಆ್ಯಂಕರ್ :
ನಗರಸಭೆ ಆವರಣದಲ್ಲಿ ನಡೆಯುತ್ತಿರುವ ‘ಬಲ್ಡೋಟ ತೊಲಗಿಸಿ, ಕೊಪ್ಪಳ ಉಳಿಸಿ’ ಧರಣಿ ವೇದಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಹೋರಾಟಗಾರರೊಂದಿಗೆ ಚರ್ಚಿಸಿದರು.
ಅಧಿವೇಶನ ಮುಗಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೋರಾಟದ ವೇದಿಕೆ ಹಾಗೂ ಕಾರ್ಖಾನೆ ಬಾಧಿತ ಗ್ರಾಮಗಳ ರೈತರ ಸಭೆ ಕರೆಯಲಾಗುವುದು. ಸಭೆಯಲ್ಲಿ ಕಾನೂನು ಅಂಶಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಬಳಿಕ ಮುಖ್ಯಮಂತ್ರಿಗಳ ಬಳಿಗೆ ಸರ್ವಪಕ್ಷ ಮುಖಂಡರು ಹಾಗೂ ಧರಣಿ ಸತ್ಯಾಗ್ರಹದ ಮುಖಂಡರ ನಿಯೋಗವನ್ನು ಕರೆದೊಯ್ಯುವ ಕುರಿತು ನಿರ್ಧರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದಕ್ಕೂ ಮುನ್ನ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಅವರು ಸಚಿವರು, ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್.ಎಲ್. ಅರಸಿದ್ದಿ ಅವರ ಸಮ್ಮುಖದಲ್ಲಿ ಸುದೀರ್ಘ ಮನವಿ ಪತ್ರ ಸಲ್ಲಿಸಿದರು.
ಕೊಪ್ಪಳ ನಗರಕ್ಕೆ ಹೊಂದಿಕೊಂಡು ಬಲ್ಡೋಟ ಸಂಸ್ಥೆಯಿಂದ ಉಕ್ಕು, ಡಾಂಬರು ಹಾಗೂ ವಿದ್ಯುತ್ ತಯಾರಿಕಾ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ, ಜನರ ಆರೋಗ್ಯ ಮತ್ತು ಜೀವದ ಸುರಕ್ಷತೆ ದೃಷ್ಟಿಯಿಂದ ಯೋಜನೆಗೆ ತಡೆ ನೀಡುವಂತೆ ಒತ್ತಾಯಿಸಿದರು. ಈ ಕುರಿತು ಫೆಬ್ರವರಿ 24, 2025ರಂದು ನಡೆದ ಬಹಿರಂಗ ಸಭೆಯಲ್ಲಿ ಗವಿಶ್ರೀಗಳು ನೀಡಿದ್ದ ಧರ್ಮಾದೇಶಕ್ಕೂ ಒಂದೂವರೆ ವರ್ಷ ಕಳೆದರೂ ಕ್ರಮ ಕೈಗೊಳ್ಳದಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ ಎಂದು ಹೇಳಿದರು.
ಈ ವಿಚಾರದಲ್ಲಿ ವಿಳಂಬ ಮಾಡದೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಬೇಕು. ಅಗತ್ಯವಿದ್ದರೆ ಸಾವಿರಾರು ಜನರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸಿದ್ಧರಿದ್ದೇವೆ ಎಂದರು.
ಶಾಸಕ ರಾಘವೇಂದ್ರ ಹಿಟ್ನಾಳ ಅವರು ಈ ಸಂದರ್ಭದಲ್ಲಿ ಯಾವುದೇ ಹೇಳಿಕೆ ನೀಡದೆ ಮೌನ ವಹಿಸಿದ ಹಿನ್ನೆಲೆಯಲ್ಲಿ, ಇದೇ 27ರಂದು ಹೋರಾಟದ 301ನೇ ದಿನ ‘ಹೋರಾಟದ ನಡೆ ಶಾಸಕರ ಮನೆ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಬೆಟ್ಟದೂರು ಘೋಷಿಸಿದರು. ಕೊಪ್ಪಳ-ಭಾಗ್ಯನಗರದ ಸುಮಾರು 1.5 ಲಕ್ಷ ಜನರು ಹಾಗೂ ಬಾಧಿತ ಗ್ರಾಮಗಳ ಸುಮಾರು 50 ಸಾವಿರ ಜನರ ಕೃಷಿ, ಆರೋಗ್ಯ ಮತ್ತು ಜೀವ ರಕ್ಷಣೆಗೆ ಜನಪ್ರತಿನಿಧಿಗಳು ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದರು.
ಬಸಾಪುರ ಕೆರೆ ಒತ್ತುವರಿ ತೆರವುಗೊಳಿಸುವಂತೆ ರೈತ ಯಮನೂರಪ್ಪ ಹಾಲಳ್ಳಿ ಮನವಿ ಮಾಡಿದ ಸಂದರ್ಭದಲ್ಲಿ ಅಧಿಕಾರಿಗಳ ವರ್ತನೆ ಕುರಿತು ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಹೋರಾಟಗಾರರಿಗೆ ಬೆದರಿಕೆಯ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ವೇದಿಕೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಸಾಮಾನ್ಯ ಜನರು ಅಧಿಕಾರಿಗಳನ್ನು ಭೇಟಿಯಾದಾಗಲೂ ಇದೇ ರೀತಿಯ ವರ್ತನೆ ನಡೆಯುವ ಆತಂಕವಿದೆ ಎಂದು ಹೋರಾಟಗಾರರು ಹೇಳಿದರು.
ವೇದಿಕೆಯಲ್ಲಿ ನಗರ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜೆಡಿಎಸ್ ಮುಖಂಡ ವೀರೇಶ ಮಹಾಂತಯ್ಯನಮಠ, ಉದ್ಯಮಿ ಬಸವರಾಜ ಬಳ್ಳೊಳ್ಳಿ, ದಾನಪ್ಪ ಕವಲೂರು ಸೇರಿದಂತೆ ಹಲವು ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್