
ವಿಶಾಖಪಟ್ಟಣಂ, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ಆಂಧ್ರಪ್ರದೇಶದ ವಿಶಾಖಪಟ್ಟಣ ಸಮೀಪದ ಗುಡಿಲೋವಾದ ‘ವಿಜ್ಞಾನ ವಿಹಾರ’ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಅಖಿಲ ಭಾರತ ಸಮನ್ವಯ ಸಭೆ ಬುಧವಾರ ಬೆಳಗ್ಗೆ ಆರಂಭವಾಯಿತು.
ಸಭೆಗೆ ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸಭೆ ಆ.21ರ ಸಂಜೆವರೆಗೆ ನಡೆಯಲಿದೆ.
ವಾರ್ಷಿಕವಾಗಿ ನಡೆಯುವ ಈ ಸಮನ್ವಯ ಸಭೆಯಲ್ಲಿ ಸರಸಂಘಚಾಲಕ ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಎಲ್ಲ ಸಹ ಸರಕಾರ್ಯವಾಹರು ಹಾಗೂ ಸಂಘದ ಇತರ ಕೇಂದ್ರ ಪದಾಧಿಕಾರಿಗಳು ಭಾಗವಹಿಸಿದ್ದಾರೆ.
ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘ, ವಿಶ್ವ ಹಿಂದೂ ಪರಿಷತ್, ಭಾರತೀಯ ಜನತಾ ಪಕ್ಷ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಭಾರತೀಯ ಕಿಸಾನ್ ಸಂಘ, ರಾಷ್ಟ್ರ ಸೇವಿಕಾ ಸಮಿತಿ ಸೇರಿದಂತೆ ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಖಿಲ ಭಾರತ ಸಂಘಟನಾ ಪ್ರಮುಖರು ಹಾಗೂ ಆಯ್ದ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ವಿವಿಧ ಸಂಘಟನೆಗಳಿಂದ 49 ಮಹಿಳೆಯರು ಸೇರಿದಂತೆ ಒಟ್ಟು 253 ಪ್ರಮುಖ ಕಾರ್ಯಕರ್ತರು ಹಾಗೂ ಸಂಘದ ಪದಾಧಿಕಾರಿಗಳು ಸೇರಿ 327 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.