
ಬಳ್ಳಾರಿ, 20 ಆಗಸ್ಟ್ (ಹಿ.ಸ.)
ಆ್ಯಂಕರ್ : ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಕರ್ನಾಟಕ ಮುಕ್ತ ಶಾಲೆ(ಕೆಒಎಸ್) ಪೂರಕ ಪರೀಕ್ಷೆಗಳು ಆ.24 ರಿಂದ ಸೆ.03 ರ ವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಪ್ರತಿಬಂಧಿಸಲಾಗಿದೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗಿರುವ ಮೇಲ್ವಿಚಾರಕರು ಹಾಗೂ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್