
ನವದೆಹಲಿ, 21 ಆಗಸ್ಟ್ (ಹಿ.ಸ.):
ಆ್ಯಂಕರ್:ಸಂಸತ್ ಮಾರ್ಗ ಪೊಲೀಸ್ ಠಾಣೆ ಹೊರಗೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಡೆಸಿದ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಈಗಾಗಲೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಎಫ್ಐಆರ್ ಕೂಡ ದಾಖಲಾಗಿರುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಇನ್ನಿಬ್ಬರು ನ್ಯಾಯಮೂರ್ತಿಗಳು, ಸಿಬಿಐನ ಮಾಜಿ ನಿರ್ದೇಶಕರು ಹಾಗೂ ಮತ್ತೊಬ್ಬ ಹಿರಿಯ ಅಧಿಕಾರಿಯೂ ಇದ್ದಾರೆ ಎಂದು ತಿಳಿಸಿದರು.
ಘಟನೆಯಲ್ಲಿ ಗುಂಡು ಹಾರಿಸಲಾಗಿತ್ತೇ ಅಥವಾ ಇಲ್ಲವೇ ಎಂಬುದೂ ಸಮಿತಿಯ ತನಿಖೆಯ ವ್ಯಾಪ್ತಿಗೆ ಬರುತ್ತದೆ ಎಂದು ಅವರು ಹೇಳಿದರು. ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ ಎಂದರು.
ರಾಹುಲ್ ಗಾಂಧಿ ಅವರಿಗೆ ಕಾನೂನಿನ ಆಳ್ವಿಕೆಯ ಬಗ್ಗೆ ಗೌರವವಿಲ್ಲವೇ? ಅನುಮತಿಯಿಲ್ಲದೆ ತಮಗೆ ಇಷ್ಟವಾದ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿ ಅರಾಜಕತೆ ಸೃಷ್ಟಿಸುವುದೇ ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದರು.
ರಾಹುಲ್ ಗಾಂಧಿ ಅನುಮತಿ ಅಥವಾ ಪೂರ್ವ ಮಾಹಿತಿ ನೀಡದೆ ಸಂಸತ್ ಮಾರ್ಗ ಪೊಲೀಸ್ ಠಾಣೆ ಹೊರಗೆ ಧರಣಿ ನಡೆಸುವ ಮೂಲಕ ಅರಾಜಕತೆಯ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಸುಪ್ರೀಂ ಕೋರ್ಟ್ ನೇಮಿಸಿರುವ ಉನ್ನತ ಮಟ್ಟದ ಸಮಿತಿ ಪ್ರಕರಣದ ತನಿಖೆ ನಡೆಸುತ್ತಿರುವಾಗ ಈ ರೀತಿಯ ಪ್ರತಿಭಟನೆ ಅಗತ್ಯವಿಲ್ಲ ಎಂದು ಅವರು ಹೇಳಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.