
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿದ್ದು, ಪ್ರಮುಖ ಮಾರುಕಟ್ಟೆಗಳು ಹಾಗೂ ದೇವಾಲಯಗಳು ಭಕ್ತರು ಮತ್ತು ಸಾರ್ವಜನಿಕರಿಂದ ಕಳೆಗಟ್ಟಿವೆ.
ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಸ್ತೆಯ ಮಧ್ಯಭಾಗದಲ್ಲಿ ವ್ಯಾಪಾರಕ್ಕೆ ಅವಕಾಶ ನಿರಾಕರಿಸಿ ರಸ್ತೆ ಬದಿಯಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಶೇಷಾದ್ರಿಪುರಂನ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ದೇವಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಎಳನೀರು ಹಾಗೂ ಹಣ್ಣುಗಳಿಂದ ಅಭಿಷೇಕ ನೆರವೇರಿಸಲಾಗುತ್ತಿದೆ. ಮಧ್ಯಾಹ್ನ 1.30ಕ್ಕೆ ಮಹಾಮಂಗಳಾರತಿ ನಡೆಯಲಿದ್ದು, ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ಐತಿಹಾಸಿಕ ಮಹಾಲಕ್ಷ್ಮೀ ದೇವಾಲಯದಲ್ಲಿಯೂ ಹಬ್ಬದ ಸಂಭ್ರಮ ಕಳೆಗಟ್ಟಿದೆ. ದೇವಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿವಿಧ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗ್ಗೆ 7.30ಕ್ಕೆ ಮಹಾಮಂಗಳಾರತಿ ನೆರವೇರಿಸಲಾಯಿತು.
ಹುಬ್ಬಳ್ಳಿ ನಗರದ ಜನತಾ ಬಜಾರ್ನಲ್ಲಿರುವ ಲಕ್ಷ್ಮೀ ದೇವಾಲಯದಲ್ಲಿಯೂ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದ್ದು, ಹೂವು, ವಿದ್ಯುತ್ ದೀಪ ಹಾಗೂ ತೋರಣಗಳಿಂದ ದೇವಾಲಯವನ್ನು ಅಲಂಕರಿಸಲಾಗಿದೆ. ಲಕ್ಷ್ಮೀ ದೇವಿಯ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.
ಸಮೃದ್ಧಿ, ಸೌಭಾಗ್ಯ ಮತ್ತು ಮಂಗಳವನ್ನು ಕರುಣಿಸುವ ಹಬ್ಬವೆಂದು ನಂಬಲಾಗಿರುವ ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದಾದ್ಯಂತ ಭಕ್ತರು ಶ್ರದ್ಧಾ-ಭಕ್ತಿಯಿಂದ ಆಚರಿಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.