
ಬೆಂಗಳೂರು, 22 ಆಗಸ್ಟ್ (ಹಿ.ಸ.):
ಆ್ಯಂಕರ್:
ಕೇವಲ ₹200 ಹಣ ನೀಡಲು ನಿರಾಕರಿಸಿದ್ದಕ್ಕೆ ಮಂಗಳಮುಖಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಹೃದಯಭಾಗದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಮಂಗಳಮುಖಿ ದೇವಿ ಕೊಲೆಯಾದ ದುರ್ದೈವಿ. ರಾಮಮೂರ್ತಿನಗರದ ಗೌತಮ್ ಎಂಬಾತ ಕೃತ್ಯವೆಸಗಿದ ಆರೋಪಿಯಾಗಿದ್ದು, ಈತನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ದರೋಡೆ ಉದ್ದೇಶದಿಂದ ದೇವಿ ಅವರ ಬಳಿ ತೆರಳಿದ ಗೌತಮ್ ಹಣಕ್ಕಾಗಿ ಒತ್ತಾಯಿಸಿದ್ದಾನೆ. ದೇವಿ ₹200 ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆರೋಪಿ ಚಾಕುವಿನಿಂದ ಅವರ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಪ್ಪಾರಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R