
ಬೆಂಗಳೂರು, 28 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯ ಪೊಲೀಸರ ಸಂಕಷ್ಟ ಭತ್ಯೆಯನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಿಸಲು ಸರ್ಕಾರ ಸಮ್ಮತಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಕರ್ನಾಟಕ ಪೊಲೀಸರ ಸಮಗ್ರ ಸಾಮರ್ಥ್ಯವೃದ್ಧಿ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸರ ಆರ್ಥಿಕ ಅಗತ್ಯಗಳಿಗೆ ಸರ್ಕಾರ ಆದ್ಯತೆ ನೀಡಲಿದ್ದು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ನೀಡುತ್ತಿರುವ ತರಬೇತಿಯನ್ನು ಜನರ ಹಾಗೂ ರಾಜ್ಯದ ರಕ್ಷಣೆಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಕರ್ನಾಟಕ ಪೊಲೀಸರು ದಕ್ಷತೆ, ಕರ್ತವ್ಯನಿಷ್ಠೆ ಮತ್ತು ಕಾರ್ಯಪಟುತೆಗೆ ಹೆಸರಾಗಿದ್ದು, ಸಮಾಜದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಬೆಂಗಳೂರು ಜಾಗತಿಕ ನಗರವಾಗಿದ್ದು, ಇಲ್ಲಿರುವ ವಿದೇಶಿಗರು ಹಾಗೂ ಜಾಗತಿಕ ಕಂಪನಿಗಳಿಗೆ ಭದ್ರತೆ ಒದಗಿಸುವುದು ಪೊಲೀಸರ ಜವಾಬ್ದಾರಿ ಎಂದರು.
ಗಗನಚುಂಬಿ ಕಟ್ಟಡಗಳಿಗೆ ಹೆಲಿಪ್ಯಾಡ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಮೇಲೆ ತುರ್ತು ಸಂದರ್ಭಗಳಲ್ಲಿ ಬಳಸಲು ಹೆಲಿಪ್ಯಾಡ್ ನಿರ್ಮಿಸುವ ಕುರಿತು ಸೇನೆ ಹಾಗೂ ವಾಯುಪಡೆ ಅಧಿಕಾರಿಗಳೊಂದಿಗೆ ಗೃಹ ಸಚಿವರು ಮಾತುಕತೆ ನಡೆಸಲಿದ್ದಾರೆ. ಕಟ್ಟಡ ನಿರ್ಮಾಣದ ವೇಳೆ ಹೆಲಿಪ್ಯಾಡ್ಗೆ ಅಗತ್ಯ ಸ್ಥಳ ಕಲ್ಪಿಸುವಂತೆ ಕಟ್ಟಡ ನಿರ್ಮಾಪಕರು ಹಾಗೂ ಅಭಿವೃದ್ಧಿದಾರರಿಗೆ ಮನವಿ ಮಾಡಿದರು.
ಪ್ರತ್ಯೇಕ ರೌಡಿ ನಿಗ್ರಹ ಪಡೆ
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ, ಬೆಂಗಳೂರು ನಗರ ಸೇರಿದಂತೆ, ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಐಪಿಎಸ್ ಅಧಿಕಾರಿಗಳ ನೇತೃತ್ವದ ಈ ಪಡೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಜನರ ಭದ್ರತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.