
ಕೋಲಾರ, ೨೯ ಆಗಸ್ಟ್ (ಹಿ.ಸ)
ಆ್ಯಂಕರ್ :. ಕೇವಲ ಪುಸ್ತಕದ ವಿದ್ಯಾಭ್ಯಾಸ ಅಥವಾ ಅಂಕಗಳಿಕೆಗೆ ಮಾತ್ರ ವಿದ್ಯಾರ್ಥಿಗಳ ಜೀವನ ಸೀಮಿತವಾಗಬಾರದು. ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಹಾಗೂ ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಅತ್ಯಂತ ಪ್ರಮುಖವಾದವು ಎಂದು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಉಮಾದೇವಿ ತಿಳಿಸಿದರು.
ಮೈ ಭಾರತ್ ಕೇಂದ್ರ ಕೋಲಾರ ಮತ್ತು ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಆಶ್ರಯದಲ್ಲಿ ಮಾಲೂರು ತಾಲ್ಲೂಕು ಲಕ್ಕೂರಿನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಧ್ಯಾನ್ಚಂದ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುವ ಈ ರಾಷ್ಟ್ರೀಯ ಕ್ರೀಡಾ ದಿನವು ನಮ್ಮ ಮಕ್ಕಳಿಗೆ ಶಿಸ್ತು, ಏಕಾಗ್ರತೆ ಮತ್ತು ಪರಸ್ಪರ ಸಹಕಾರದ ಗುಣಗಳನ್ನು ಕಲಿಸುತ್ತದೆ. ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿಯೂ ಉನ್ನತ ಮಟ್ಟಕ್ಕೇರಬೇಕು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಉತ್ತಮ ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು
ಮೈ ಭಾರತ್ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಮಹೇಂದ್ರ ರೆಡ್ಡಿ ಮಾತನಾಡಿ ಕ್ರೀಡೆಯು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಯುವಜನರಲ್ಲಿ ನಾಯಕತ್ವ ಗುಣಗಳು ಹಾಗೂ ಕ್ರೀಡಾ ಸ್ಪೂರ್ತಿಯನ್ನು ಬೆಳೆಸುವಲ್ಲಿ ಇಂತಹ ಕ್ರೀಡಾಕೂಟಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಗೌರವ ಸಲಹೆಗಾರ ಹಾಗೂ ಮಾಲೂರು ಫುಡ್ ಬ್ಯಾಂಕ್ನ ಎನ್. ಪ್ರದೀಪ್ ಮಾತನಾಡಿ ಶಿಕ್ಷಣದ ಜೊತೆಗೆ ಕಲೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಬುನಾದಿಯಾಗಲಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಮೈ ಭಾರತ್ ಕೇಂದ್ರ ಕೋಲಾರದ ಸಿಬ್ಬಂದಿ, ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಅಧ್ಯಕ್ಷ ಕೆ. ಗೌತಮ್, ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಶೈಕ್ಷಣಿಕ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್