ಸಂಪೂರ್ಣ ಗದಗ ಜಿಲ್ಲೆ ಬರ ಘೋಷಣೆಗೆ ರೈತರ ಆಗ್ರಹ
ಗದಗ, 31 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಗದಗ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ರ
ಫೋಟೋ


ಗದಗ, 31 ಆಗಸ್ಟ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಗದಗ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಗದಗ ಜಿಲ್ಲೆಗೆ ಪ್ರವಾಸ ಕೈಗೊಂಡು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದರ ಜೊತೆಗೆ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತಮ್ಮ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದಾರೆ.

ಈ ಕುರಿತು ಲಕ್ಷ್ಮೇಶ್ವರ ಪಟ್ಟಣದಲ್ಲಿ ತಾಲೂಕಿನ ರೈತರು ಸಭೆ ನಡೆಸಿ ಚರ್ಚಿಸಿದ್ದು, ಮುಖ್ಯಮಂತ್ರಿಗಳ ಭೇಟಿಯ ವೇಳೆ ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ತೀವ್ರವಾಗಿ ಹಿನ್ನಡೆ ಕಂಡಿದ್ದು, ರೈತರು ಬಿತ್ತನೆ ಮಾಡಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗಿ ಹೋಗುತ್ತಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇವಲ ಒಂದು ತಾಲೂಕಿಗೆ ಬರ ಘೋಷಣೆ ಏಕೆ?

ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಬರದ ಪರಿಸ್ಥಿತಿ ತೀವ್ರವಾಗಿದ್ದರೂ, ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ರೈತ ಮುಖಂಟ ಮಂಜುನಾಥ ಮಾಗಡಿ ಹೇಳಿದರು. ಉಳಿದ ತಾಲೂಕುಗಳಲ್ಲಿಯೂ ಮಳೆ ಕೊರತೆಯಿಂದ ಬೆಳೆ ನಷ್ಟವಾಗಿದ್ದು, ಕೃಷಿಯನ್ನೇ ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ಹೀಗಿರುವಾಗ ಜಿಲ್ಲೆಯ ಇತರೆ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಡುವುದು ಸರಿಯಲ್ಲ ಎಂಬುದು ರೈತರ ವಾದವಾಗಿದೆ.

ಬಿತ್ತನೆ ಸಂದರ್ಭದಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಬೀಜ, ರಸಗೊಬ್ಬರ, ಕೃಷಿ ಚಟುವಟಿಕೆಗಳಿಗೆ ಹಣ ಖರ್ಚು ಮಾಡಿದ್ದಾರೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೃಷಿ ವೆಚ್ಚ ಮಾಡಿರುವ ರೈತರಿಗೆ ಬೆಳೆ ಕೈಕೊಟ್ಟರೆ ಮುಂದಿನ ದಿನಗಳಲ್ಲಿ ಸಾಲದ ಹೊರೆ ಹೆಚ್ಚಾಗುವ ಆತಂಕ ಎದುರಾಗಿದೆ.

ಸಿಎಂಗೆ ರೈತರ ನೇರ ಎಚ್ಚರಿಕೆ

“ಗದಗ ಜಿಲ್ಲೆಯ ವಾಸ್ತವ ಬರ ಪರಿಸ್ಥಿತಿಯನ್ನು ಅರಿತುಕೊಳ್ಳಿ. ಜಿಲ್ಲೆಯ ಉಳಿದ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಿ ಗದಗ ಜಿಲ್ಲೆಗೆ ಬನ್ನಿ. ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿ ಬಂದರೆ ರೈತರ ಪರವಾಗಿ ಮುಖ್ಯಮಂತ್ರಿಗಳನ್ನು ಸನ್ಮಾನಿಸುತ್ತೇವೆ. ಆದರೆ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಕೇವಲ ಒಂದು ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಬಂದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ರೈತರು ಈ ಎಚ್ಚರಿಕೆ ನೀಡಿದ್ದು, ಸರ್ಕಾರ ಕೂಡಲೇ ಜಿಲ್ಲೆಯ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರಿಗಳ ಸಭೆಯಲ್ಲಿ ರೈತರ ಸಮಸ್ಯೆ ಪ್ರಸ್ತಾಪಕ್ಕೆ ಒತ್ತಾಯ

ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಮಳೆ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ, ತೇವಾಂಶ, ಬೆಳೆ ಹಾನಿ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ವೈಜ್ಞಾನಿಕವಾಗಿ ಬರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಕೇವಲ ಸರ್ಕಾರಿ ದಾಖಲೆಗಳ ಆಧಾರದ ಮೇಲೆ ಬರ ಪರಿಸ್ಥಿತಿಯನ್ನು ನಿರ್ಧರಿಸುವ ಬದಲು, ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹೊಲಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಒಣಗಿರುವ ಬೆಳೆಗಳು, ಬರಿದಾಗಿರುವ ಜಮೀನುಗಳು ಹಾಗೂ ರೈತರ ಸಂಕಷ್ಟವನ್ನು ಅಧಿಕಾರಿಗಳು ನೇರವಾಗಿ ಗಮನಿಸಬೇಕು ಎಂದು ರೈತರು ಹೇಳಿದ್ದಾರೆ.

ರೈತರ ಪ್ರತಿಭಟನೆ: ಜಿಲ್ಲಾಡಳಿತಕ್ಕೆ ಸವಾಲು

ಮುಖ್ಯಮಂತ್ರಿಗಳ ಗದಗ ಪ್ರವಾಸದ ಹಿನ್ನೆಲೆಯಲ್ಲಿ ರೈತರು ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ ನೀಡಿರುವುದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಒಂದೆಡೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ರೈತ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಸಲು ಹೋರಾಟದ ಎಚ್ಚರಿಕೆ ನೀಡಿವೆ. ಹೀಗಾಗಿ ನಾಳಿನ ಸಿಎಂ ಪ್ರವಾಸದ ವೇಳೆ ಬರ ಘೋಷಣೆ ವಿಚಾರ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಜಿಲ್ಲೆಯ ಎಲ್ಲ ತಾಲೂಕುಗಳ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಮಗ್ರ ರೈತ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande