
ನವದೆಹಲಿ, 31 ಆಗಸ್ಟ್ (ಹಿ.ಸ.):
ಆ್ಯಂಕರ್:ಉತ್ತರಾಖಂಡದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿ ಬಳಿಕ ‘ಶುದ್ಧೀಕರಣ’ದ ಹೆಸರಿನಲ್ಲಿ ನಡೆದಿರುವ ಎನ್ನಲಾದ ಅಸ್ಪೃಶ್ಯತೆ ಹಾಗೂ ಅವಮಾನ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.
ಸೋಮವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, ದಲಿತರ ಮೇಲಿನ ಅನ್ಯಾಯ, ಅವಮಾನ ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಖರ್ಗೆ ವಿರುದ್ಧ ತಾರತಮ್ಯ ನಡೆಸಿದ ಆರೋಪಿಗಳ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಖರ್ಗೆ ಅವರ ರ್ಯಾಲಿ ಬಳಿಕ ‘ಶುದ್ಧೀಕರಣ’ದ ಹೆಸರಿನಲ್ಲಿ ನಡೆದಿರುವ ಅಸ್ಪೃಶ್ಯತೆ ಹಾಗೂ ಅವಮಾನ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಆದರೆ ನ್ಯಾಯಕ್ಕಾಗಿ ಆಗ್ರಹಿಸಿದ್ದನ್ನೇ ಬಿಜೆಪಿ ಸರ್ಕಾರ ಸಹಿಸಿಕೊಳ್ಳಲಿಲ್ಲ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ, ಮರುದಿನವೇ ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ರಮೇಶ್ ಆರೋಪಿಸಿದರು.
ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಪ್ರತಿಪಾದಿಸುವ ನ್ಯಾಯದ ಮೌಲ್ಯಗಳಿಗೆ ವಿರುದ್ಧವಾದ ಮನೋಭಾವವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.
ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಹಾಗೂ ಧ್ವನಿ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ. ಖರ್ಗೆ ವಿರುದ್ಧ ‘ಶುದ್ಧೀಕರಣ’ದ ಹೆಸರಿನಲ್ಲಿ ಅಸ್ಪೃಶ್ಯತೆ ಮತ್ತು ಅವಮಾನ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನ್ಯಾಯ ದೊರೆಯುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ಜೈರಾಮ್ ರಮೇಶ್ ಹೇಳಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.