


ಬಳ್ಳಾರಿ, 31 ಆಗಸ್ಟ್ (ಹಿ.ಸ.)
ಆ್ಯಂಕರ್: ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಹೊಣೆ. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವ ಮೂಲಕ ರಕ್ತಹೀನತೆಯನ್ನು ತಡೆಗಟ್ಟಬೇಕು ಎಂದು ಗಾಂಧಿನಗರ ಬಡಾವಣೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ದಿವ್ಯಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಹೆಚ್. ವಿಭಾಗ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗಾಂಧಿನಗರ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಆರೋಗ್ಯ ಸಮಿತಿಯ ಸದಸ್ಯರ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಕಬ್ಬಿಣಾಂಶ ಹಾಗೂ ಕ್ಯಾಲ್ಸಿಯಂ ಮಾತ್ರೆಗಳನ್ನು ಕಡ್ಡಾಯವಾಗಿ ಸೇವಿಸಬೇಕು. ಇದರೊಂದಿಗೆ ಮೊಳಕೆ ಕಾಳು, ಶೇಂಗಾ, ಬೆಲ್ಲ, ಹಾಲು, ನುಗ್ಗೆಸೊಪ್ಪು ಮತ್ತು ಹಣ್ಣುಗಳನ್ನು ಆಹಾರದಲ್ಲಿ ಹೆಚ್ಚು ಬಳಸಬೇಕು. ಪ್ರತಿ ತಿಂಗಳ 9ನೇ ತಾರೀಖಿನಂದು ನಡೆಯುವ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಅಭಿಯಾನದಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಗು ಜನನದ ನಂತರ ಮೊದಲ 6 ತಿಂಗಳು ಕೇವಲ ಎದೆಹಾಲು ಮಾತ್ರ ನೀಡಬೇಕು. 12 ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕು ಮತ್ತು ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರ ಕಾಪಾಡಿಕೊಳ್ಳಲು ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಮಾತನಾಡಿ, ನೇತ್ರದಾನ ಪಾಕ್ಷಿಕ (ಆಗಸ್ಟ್ 25 ರಿಂದ ಸೆಪ್ಟೆಂಬರ್ 8 ರ ವರೆಗೆ), ಬಾಲ್ಯವಿವಾಹ ನಿಷೇಧ, ಹೆಚ್.ಪಿ.ವಿ. ಲಸಿಕೆ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಸಾತ್ವಿಕ್ ಅವರು ಸಮಿತಿಯ ಜವಾಬ್ದಾರಿಗಳ ಕುರಿತು ಹಾಗೂ ಬಿ.ಪಿ.ಎಂ ಮೇಘರಾಜ್ ಅವರು ಸೊಳ್ಳೆಗಳಿಂದ ಹರಡುವ ರೋಗಗಳು, ಕ್ಷಯ ಮತ್ತು ಕುಷ್ಠರೋಗ ನಿರ್ಮೂಲನೆ ಬಗ್ಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಆರೋಗ್ಯ ಸಮಿತಿ ಸದಸ್ಯರಿಗೆ ತರಬೇತಿ ಕಿಟ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಚ್.ಐ.ಒ. ಸಿದ್ದರಾಮ, ಪಿ.ಎಚ್.ಸಿ.ಒ. ನಾಗಮಣಿ, ಎಲ್.ಡಿ.ಸಿ. ರಾಘವೇಂದ್ರ, ಎಂ.ಎಲ್.ಡಬ್ಲ್ಯೂ. ನರೇಶ್, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು. ಎಚ್.ಐ.ಒ. ಮಹಾದೇವಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್