
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತದಲ್ಲಿ ರಾಜ್ಯದಲ್ಲಿ ಅಘೋಷಿತ ವಿದ್ಯುತ್ ಕಡಿತ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳ ಪ್ರಚಾರದ ನಡುವೆ ರಾಜ್ಯದ ಜನತೆಗೆ ‘ಕತ್ತಲೆಯ ಕರುನಾಡು’ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಮಳೆ ಕೊರತೆಯ ನೆಪದಲ್ಲಿ ಪ್ರತಿದಿನ 2ರಿಂದ 3 ಗಂಟೆಗಳ ಕಾಲ ಅಘೋಷಿತ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 5ರಿಂದ 6 ಗಂಟೆಗಳ ಕಾಲ ವಿದ್ಯುತ್ ಇಲ್ಲದೆ ಪಂಪ್ಸೆಟ್ಗಳು ಸ್ಥಗಿತಗೊಂಡಿದ್ದು, ಬೆಳೆದು ನಿಂತಿರುವ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಲಭ್ಯವಿರುವ ವಿದ್ಯುತ್ ಉತ್ಪಾದನಾ ಘಟಕಗಳಿಂದ ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಮಾಡದೆ, ಹೊರರಾಜ್ಯಗಳಿಂದ ದುಬಾರಿ ದರದಲ್ಲಿ ವಿದ್ಯುತ್ ಖರೀದಿಸಲು ಸರ್ಕಾರ ಮುಂದಾಗಿದೆ ಎಂದು ಅವರು ದೂರಿದ್ದಾರೆ.
ಸಂಜೆ 6.30ರಿಂದ ರಾತ್ರಿ 9.30ರವರೆಗಿನ ಗರಿಷ್ಠ ಬೇಡಿಕೆಯ ಅವಧಿಯಲ್ಲಿ ಶೇ.30ರಿಂದ 40ರಷ್ಟು ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಗೃಹಿಣಿಯರು, ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಶೋಕ ಹೇಳಿದ್ದಾರೆ.
ಇಂಧನ ಇಲಾಖೆಯನ್ನು ಅವ್ಯವಸ್ಥೆಗೆ ತಳ್ಳಲಾಗಿದೆ. ಯೋಜನೆಗಳ ಹೆಸರಿನಲ್ಲಿ ಖಜಾನೆ ಲೂಟಿ ಮಾಡಿರುವುದೇ ಸರ್ಕಾರದ 100 ದಿನಗಳ ಸಾಧನೆ ಎಂದು ಟೀಕಿಸಿರುವ ಅವರು, ಬರಿದಾದ ಜಲಾಶಯಗಳ ನೆಪ ಹೇಳುವುದನ್ನು ಬಿಟ್ಟು ವಿದ್ಯುತ್ ಅಭಾವವನ್ನು ತಕ್ಷಣ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ‘ಶಾಶ್ವತ ಲೋಡ್ ಶೆಡ್ಡಿಂಗ್’ ಮಾಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.