
ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನವದೆಹಲಿಯಲ್ಲಿ ನಡೆದ ಐತಿಹಾಸಿಕ ಬ್ರಿಕ್ಸ್ ಶೃಂಗಸಭೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಪ್ರಭಾವವನ್ನು ಮತ್ತಷ್ಟು ಬಲಪಡಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತವು ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆಗೆ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.
ಬ್ರಿಕ್ಸ್ ಸಹಕಾರವನ್ನು ಸಾಮಾನ್ಯ ಜನರೊಂದಿಗೆ ನೇರವಾಗಿ ಸಂಪರ್ಕಿಸುವುದಕ್ಕೆ ಭಾರತ ವಿಶೇಷ ಒತ್ತು ನೀಡಿದೆ. ಸಮಗ್ರ ಮತ್ತು ಜನಕೇಂದ್ರಿತವಾದ ಈ ವಿಧಾನವೇ ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಪ್ರಮುಖ ವೈಶಿಷ್ಟ್ಯವಾಗಿತ್ತು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
2026ರ ನವದೆಹಲಿ ಘೋಷಣಾಪತ್ರಕ್ಕೆ ಸಹಿ ಹಾಕಿರುವುದು ಮಹತ್ವದ ಸಾಧನೆ ಎಂದು ಅವರು ಬಣ್ಣಿಸಿದ್ದಾರೆ. ಇದು ಕೇವಲ ಒಂದು ದಾಖಲೆಯಲ್ಲ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ಸಾರುವ ಮಹತ್ವದ ಘೋಷಣೆಯಾಗಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ದಕ್ಷಿಣ ರಾಷ್ಟ್ರಗಳನ್ನು ಅಂಚಿನಲ್ಲಿಡದೆ, ಅವುಗಳನ್ನು ಜಾಗತಿಕ ವ್ಯವಸ್ಥೆಯ ಕೇಂದ್ರದಲ್ಲಿ ಇರಿಸುವ ನಿಟ್ಟಿನಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ. ಹೆಚ್ಚು ಸಮಗ್ರ, ಪ್ರತಿನಿಧಿತ್ವ ಹೊಂದಿರುವ ಹಾಗೂ ಸಮತೋಲಿತ ಜಾಗತಿಕ ವ್ಯವಸ್ಥೆಗಾಗಿ ಭಾರತ ಧ್ವನಿ ಎತ್ತಿದೆ ಎಂದು ಅವರು ಹೇಳಿದ್ದಾರೆ.
ಭಾರತದ ‘ವಸುದೈವ ಕುಟುಂಬಕಂ’ ಎಂಬ ನಾಗರಿಕತಾ ಮೌಲ್ಯವನ್ನು ಆಧಾರವಾಗಿಟ್ಟುಕೊಂಡು, ನಾಯಕತ್ವ ಎಂದರೆ ಅತಿ ಜೋರಾಗಿ ಮಾತನಾಡುವುದಲ್ಲ, ಬದಲಾಗಿ ಬಲವಾದ ಒಮ್ಮತವನ್ನು ನಿರ್ಮಿಸುವುದಾಗಿದೆ ಎಂಬುದನ್ನು ಭಾರತ ಮತ್ತೊಮ್ಮೆ ತೋರಿಸಿಕೊಟ್ಟಿದೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
“ಭಾರತ ನಾಯಕತ್ವ ವಹಿಸಿದಾಗ, ಜಗತ್ತು ಆಲಿಸುತ್ತದೆ” ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಯಶಸ್ಸಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ರಾಜನಾಥ್ ಸಿಂಗ್, ಈ ಶೃಂಗಸಭೆಯ ಯಶಸ್ಸು ಜಾಗತಿಕ ವೇದಿಕೆಯಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.