
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
₹2 ಸಾವಿರದವರೆಗಿನ ಯುಪಿಐ ವಹಿವಾಟುಗಳಿಗೆ ಶುಲ್ಕವಿಲ್ಲದೆ, ಅದಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
‘ಯುಪಿಐಗೆ ಶುಲ್ಕವಿಲ್ಲ’ ಎಂಬ ವ್ಯವಸ್ಥೆಯನ್ನು ಬದಲಾಯಿಸುವ ಸಿದ್ಧತೆ ನಡೆಯುತ್ತಿದ್ದು, ₹5 ಸಾವಿರದ ವಹಿವಾಟಿಗೆ ₹25 ಹಾಗೂ ₹10 ಸಾವಿರದ ವಹಿವಾಟಿಗೆ ₹50ರವರೆಗೆ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಉಲ್ಲೇಖಿಸಿರುವ ಖರ್ಗೆ, ಈ ಸುದ್ದಿ ಎಷ್ಟು ಸತ್ಯ ಎಂಬುದನ್ನು ಸರ್ಕಾರ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, ಬೆಲೆ ಏರಿಕೆಯಿಂದಾಗಿ ಈಗಾಗಲೇ ಜನಸಾಮಾನ್ಯರ ಜೇಬು ಖಾಲಿಯಾಗುತ್ತಿದೆ. ಸಗಟು ಬೆಲೆ ಏರಿಕೆ ಪ್ರಮಾಣವೂ ಸುಮಾರು ಶೇ.10ರಷ್ಟಿದ್ದು, ಇಂತಹ ಸಂದರ್ಭದಲ್ಲಿ ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಿದರೆ ಜನರ ಉಳಿತಾಯದ ಮೇಲೆ ಮತ್ತಷ್ಟು ಹೊರೆ ಬೀಳಲಿದೆ ಎಂದು ಹೇಳಿದ್ದಾರೆ.
ಸುಮಾರು 10 ವರ್ಷಗಳ ಹಿಂದೆ ನೋಟು ಅಮಾನ್ಯೀಕರಣದ ಮೂಲಕ ಆರ್ಥಿಕತೆಗೆ ಹೊಡೆತ ನೀಡಲಾಗಿತ್ತು. ಅದರ ಪರಿಣಾಮಗಳ ಕುರಿತು ಪ್ರಶ್ನೆಗಳು ಎದುರಾದಾಗ, ಡಿಜಿಟಲ್ ಪಾವತಿ ಹಾಗೂ ನಗದುರಹಿತ ಆರ್ಥಿಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ನೋಟು ಅಮಾನ್ಯೀಕರಣ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು ಎಂದು ಖರ್ಗೆ ಹೇಳಿದ್ದಾರೆ.
ಇತ್ತೀಚೆಗೆ ಹಣಕಾಸು ಸಚಿವರು ಸಂಸತ್ತಿನಲ್ಲಿ ಯುಪಿಐ ವಹಿವಾಟಿನ ಮೇಲೆ ಯಾವುದೇ ತೆರಿಗೆ ಅಥವಾ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಹೇಳಿದ್ದರು. ಹಾಗಿದ್ದರೂ, ₹5 ಸಾವಿರದ ವಹಿವಾಟಿಗೆ ₹25 ಹಾಗೂ ₹10 ಸಾವಿರದ ವಹಿವಾಟಿಗೆ ₹50ರವರೆಗೆ ಶುಲ್ಕ ವಿಧಿಸುವ ಸಾಧ್ಯತೆಯಿದೆ ಎಂಬ ಮಾಧ್ಯಮ ವರದಿಗಳು ನಿಜವೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ವ್ಯಾಪಾರಿಗಳಿಂದ ವಸೂಲಾಗುವ ಹೆಚ್ಚುವರಿ ಶುಲ್ಕದ ಹೊರೆ ಅಂತಿಮವಾಗಿ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಕೆಯ ಮೂಲಕ ಗ್ರಾಹಕರ ಮೇಲೆಯೇ ಬೀಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಪರಿಹಾರ ನೀಡುವ ಬದಲು ಅವರ ಜೇಬಿನ ಮೇಲೆ ಮತ್ತಷ್ಟು ಹೊರೆ ಹಾಕುವ ಹೊಸ ಮಾರ್ಗಗಳನ್ನು ಸರ್ಕಾರ ಹುಡುಕುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.