
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಬೇರೆ ಊರುಗಳಿಗೆ ಸ್ಥಳಾಂತರಗೊಂಡು ನೆಲೆಸಿರುವ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ವಿಧಾನಸೌಧದಲ್ಲಿ ಬುಧವಾರ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ರಾಜ್ಯಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು.
ಹೆಸರು ತಿದ್ದುಪಡಿ ಸೇರಿದಂತೆ ವಿವಿಧ ವಿಚಾರಗಳಿಗೆ ನೋಟಿಸ್ ನೀಡಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕಾರಣಾಂತರಗಳಿಂದ ಊರು ತೊರೆದು ಹಲವು ವರ್ಷಗಳಿಂದ ಬೇರೆಡೆ ನೆಲೆಸಿರುವ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಅರ್ಹರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅರ್ಜಿ ನಮೂನೆ-6ರ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಶಾಶ್ವತ ನಿವಾಸಿಗಳ ಪ್ರಮಾಣಪತ್ರ (PRC) ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು. ಅರ್ಹ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಪ್ರಮಾಣಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯವನ್ನು ತ್ವರಿತಗೊಳಿಸುವಂತೆ ಹಾಗೂ ‘ಪ್ರಜಾಸೇವಾ ಅಭಿಯಾನ’ದಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡುವಂತೆ ಡಾ. ಜಿ. ಪರಮೇಶ್ವರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R