
ಉಧಂಪುರ್, 17 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬ್ರಟ್ಟಲ್ ಪ್ರದೇಶದಲ್ಲಿ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಬ್ರಟ್ಟಲ್ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸೆ.16 ಮತ್ತು 17ರ ಮಧ್ಯರಾತ್ರಿ ‘ಆಪರೇಷನ್ ಸೋಹನ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಪ್ರತಿಕೂಲ ಹವಾಮಾನ, ಕಠಿಣ ಭೂಪ್ರದೇಶ ಹಾಗೂ ಕಡಿಮೆ ಗೋಚರತೆಯ ನಡುವೆಯೂ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.
ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಪ್ರದೇಶದಲ್ಲಿ ಯಾವುದೇ ಉಗ್ರರು ಉಳಿದಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ವ್ಯಾಪಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಹತರಾದ ಉಗ್ರರ ಗುರುತು ಪತ್ತೆ ಕಾರ್ಯವೂ ನಡೆಯುತ್ತಿದೆ.
ಇದಕ್ಕೂ ಮುನ್ನ ಬುಧವಾರ ತಡರಾತ್ರಿ ಮಜಾಲ್ತಾ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದವು. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.