
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಪ್ರತಿಷ್ಠಿತ ಕೆಎಲ್ಇ ಸಂಸ್ಥೆ ಹುಬ್ಬಳ್ಳಿಯಲ್ಲಿ ನಿರ್ಮಿಸಿರುವ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟನೆಗೆ ಆಗಮಿಸಬೇಕಿದ್ದ ಸಂದರ್ಭದಲ್ಲಿ ದಿಢೀರ್ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ, ಅವರ ಅನುಪಸ್ಥಿತಿಯಲ್ಲಿ ಪ್ರಲ್ಹಾದ ಜೋಶಿ ನೂತನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕೆಎಲ್ಇ ಸಂಸ್ಥೆಯು ಹುಬ್ಬಳ್ಳಿಯಲ್ಲಿ 50 ಎಕರೆ ವಿಶಾಲ ಪ್ರದೇಶದಲ್ಲಿ 30 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಈ ವೈದ್ಯಕೀಯ ಸಂಕೀರ್ಣವನ್ನು ನಿರ್ಮಿಸಿದ್ದು, ಸುಮಾರು ₹700 ಕೋಟಿ ವೆಚ್ಚವಾಗಿದೆ. 1,200 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಈ ಕೇಂದ್ರದಲ್ಲಿ ವೈದ್ಯಕೀಯ ಶಿಕ್ಷಣ, ಬೋಧನೆ, ಸಂಶೋಧನೆ ಹಾಗೂ ಆಸ್ಪತ್ರೆ ಸೇವೆಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೆಎಲ್ಇ ಕೊಡುಗೆ
ಕೆಎಲ್ಇ ಸಂಸ್ಥೆಯು ಪ್ರಭಾಕರ ಕೋರೆ ಅವರ ಸಾರಥ್ಯದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಈ ಭಾಗದ ನಿರುದ್ಯೋಗ, ಶಿಕ್ಷಣ, ಆರ್ಥಿಕತೆ, ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಗಳಿಗೆ ಸಂಸ್ಥೆ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿದೆ ಎಂದು ಜೋಶಿ ಶ್ಲಾಘಿಸಿದರು.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಆರಂಭಗೊಂಡಿರುವ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯವು ವೈದ್ಯಕೀಯ ಶಿಕ್ಷಣ, ಅತ್ಯಾಧುನಿಕ ಚಿಕಿತ್ಸೆ, ಸಂಶೋಧನೆ, ತಂತ್ರಜ್ಞಾನ ಮತ್ತು ಸಮುದಾಯ ಸೇವೆಗಳನ್ನು ಒದಗಿಸುವ ಸಮಗ್ರ ಶೈಕ್ಷಣಿಕ ಹಾಗೂ ವೈದ್ಯಕೀಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಬಡವರು ಮತ್ತು ಮಧ್ಯಮ ವರ್ಗದವರಿಗೆ ಅತ್ಯುತ್ತಮ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶವನ್ನು ಈ ಕೇಂದ್ರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಬ್ಬರಿಗೂ ಸುಲಭವಾಗಿ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ದೊರೆಯುವಂತೆ ಮಾಡುವ ಸಂಕಲ್ಪದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.
ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಸಂಸದರು ಹಾಗೂ ಶಾಸಕರು, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಅಧ್ಯಕ್ಷ ಮಹಾಂತೇಶ ಕೌಜಲಗಿ, ಅಮಿತ್ ಕೋರೆ ಸೇರಿದಂತೆ ಗಣ್ಯರು ಹಾಗೂ ಕೆಎಲ್ಇ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.