
ಲಿಂಗಸೂರು, 03ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಲಿಂಗಸೂರಿನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಯು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸವಣ್ಣನವರ ತತ್ವಗಳು ಹಾಗೂ ಇಸ್ಲಾಂ ಧರ್ಮದ ಕುರಿತು ಮಾತನಾಡುತ್ತಾ ಅವರು ಬಳಸಿದ ಭಾಷೆ ಸಭ್ಯತೆಯ ಮೀರಿದೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕಾಂಗ್ರೆಸ್ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಅವರ ಇಸ್ಲಾಂ ಧರ್ಮ ಕುರಿತ ಹೇಳಿಕೆಯನ್ನು ನೆಪವನ್ನಾಗಿಟ್ಟುಕೊಂಡು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಸಿ.ಟಿ. ರವಿ, ವೈಯಕ್ತಿಕ ಅವಹೇಳನಕ್ಕಿಳಿದಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ವೇದಿಕೆಯಲ್ಲಿ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಮತ್ತು ಮಹಿಳೆಯರು ಹಾಗೂ ಸಾರ್ವಜನಿಕರ ಮುಂದೆ ಉಚ್ಚರಿಸಲಾಗದ ಅಸಭ್ಯ ಪದಗಳನ್ನು ಬಳಸಿ ಭಾಷೆ ಪ್ರದರ್ಶಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಧಾರ್ಮಿಕ ವಿಷಯಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಾ ಸಮಾಜದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ರಾಜಕೀಯ ನಾಯಕನೊಬ್ಬ ಇಂತಹ ಕೀಳುಮಟ್ಟದ ಭಾಷೆ ಬಳಸುವುದು ಸಾಮಾಜಿಕ ಸೌಹಾರ್ದತೆಗೆ ಹಾಗೂ ಶಾಂತಿ-ಸುವ್ಯವಸ್ಥೆಗೆ ಮಾರಕವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ, ಸಿ.ಟಿ. ರವಿ ಅವರ ಭಾಷಣದ ವಿಡಿಯೋ, ಆಡಿಯೋ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ನು ಕೂಡಲೇ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.
ಸಾರ್ವಜನಿಕವಾಗಿ ಇಂತಹ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳು ಮರುಕಳಿಸದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪೊಲೀಸ್ ಠಾಣೆಗೆ ಹಾಗೂ ಸಂವಿಧಾನಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R