
ಶ್ರೀರಂಗಪಟ್ಟಣ,03ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಬಸ್ ನಿಲ್ಲಿಸದೆ ನಿರ್ಲಕ್ಷ್ಯ ತೋರುತ್ತಿರುವ ಕೆಎಸ್ಆರ್ಟಿಸಿ ಬಸ್ಗಳ ವಿರುದ್ಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದ ವಿದ್ಯಾರ್ಥಿಗಳು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಇಂದು ನಡೆದಿದೆ.
ಮಹದೇವಪುರ ಗ್ರಾಮದಿಂದ ನಿತ್ಯವೂ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ಶಾಲೆಗಳಿಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳನ್ನೇ ನೆಚ್ಚಿಕೊಂಡಿದ್ದಾರೆ. ಆದರೆ, ಈ ಮಾರ್ಗದಲ್ಲಿ ಸಂಚರಿಸುವ ಹೆಚ್ಚಿನ ಬಸ್ಗಳು ಮಹದೇವಪುರ ಗ್ರಾಮದ ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಹಾಗೇ ವೇಗವಾಗಿ ಹೋಗುತ್ತಿರುವುದು ನಿತ್ಯದ ಸಮಸ್ಯೆಯಾಗಿತ್ತು. ಇದರಿಂದ ವಿದ್ಯಾರ್ಥಿಗಳು ನಿತ್ಯ ಕಾಲೇಜಿಗೆ ತಲುಪಲು ವಿಳಂಬವಾಗಿ ತೊಂದರೆ ಅನುಭವಿಸುತ್ತಿದ್ದರು.
ಇಂದೂ ಸಹ ಎಂದಿನಂತೆ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ, ಎಂದಿನಂತೆ ಬಸ್ ನಿಲ್ಲಿಸದೆ ಹೊರಟ ಕೆಎಸ್ಆರ್ಟಿಸಿ ಬಸ್ ಅನ್ನು ವಿದ್ಯಾರ್ಥಿಗಳು ರಸ್ತೆ ಮಧ್ಯೆ ನಿಂತು ತಡೆದರು. ಬಳಿಕ ಬಸ್ನಲ್ಲಿದ್ದ ಚಾಲಕ ಹಾಗೂ ಕಂಡಕ್ಟರ್ ಅವರನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡರು. ನಮ್ಮೂರಿಗೆ ಬರುವ ಬಸ್ಗಳು ಇಲ್ಲಿ ಕಡ್ಡಾಯವಾಗಿ ನಿಲ್ಲಿಸಲೇಬೇಕು ಎಂದು ಪಟ್ಟುಹಿಡಿದು ಕೆಲಕಾಲ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಧಿಕಾರಿಗಳು ಧಾವಿಸಿ, ಇನ್ನುಮುಂದೆ ಯಾವುದೇ ಬಸ್ಗಳು ತಪ್ಪದೇ ಮಹದೇವಪುರ ಗ್ರಾಮದಲ್ಲಿ ನಿಲ್ಲುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R