
ಮಂಡ್ಯ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಕಾಲುವೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬಿರುವಳ್ಳಿ ಗ್ರಾಮದ ಬಳಿ ನಡೆದಿದೆ.
ಬಿರುವಳ್ಳಿ ಗ್ರಾಮದ ನಿವಾಸಿ ಗೌತಮ್ (14) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.ಗೌತಮ್ ತನ್ನ ಸ್ನೇಹಿತರೊಂದಿಗೆ ಸ್ಥಳೀಯ ಹೇಮಾವತಿ ಬಲದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುವ ಸಮಯದಲ್ಲಿ ಆಕಸ್ಮಿಕವಾಗಿ ಆಳವಾದ ನೀರಿಗೆ ಸಿಲುಕಿದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.
ಘಟನೆ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R