
ಬೀದರ್, 04 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಬೆಳಿಗ್ಗೆ ಹೊಲಕ್ಕೆ ತೆರಳಿದ್ದ ಇಬ್ಬರು ರೈತರ ಮೇಲೆ ಕಾಡು ಹಂದಿ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.
ಚನ್ನಬಸಪ್ಪ ಭೂರೆ (70) ಮತ್ತು ಸಂಪತಾ ಸುಭಾಷ್ (45) ಗಾಯಗೊಂಡ ರೈತರು. ಇವರು ಎಂದಿನಂತೆ ತಮ್ಮ ಕೃಷಿ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಬಂದ ಕಾಡು ಹಂದಿ ಇವರ ಮೇಲೆ ದಾಳಿ ನಡೆಸಿದೆ.
ಘಟನೆಯನ್ನು ಗಮನಿಸಿದ ಸ್ಥಳೀಯರು ಕೂಡಲೇ ಮಧ್ಯಪ್ರವೇಶಿಸಿ, ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಭಾಲ್ಕಿ ಪಟ್ಟಣದ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೀದರ್ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈ ಅನಿರೀಕ್ಷಿತ ಹಂದಿ ದಾಳಿಯಿಂದ ಆನಂದವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಲ್ಲಿ ತೀವ್ರ ಆತಂಕ ಮೂಡಿದೆ. ಅರಣ್ಯ ಸಂಚಾರ ಮತ್ತು ಕೃಷಿ ಚಟುವಟಿಕೆಗಳಿಗೆ ತೆರಳಲು ರೈತರು ಭಯಪಡುವಂತಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಕಾಡುಪ್ರಾಣಿಗಳ ಹಾವಳಿಯನ್ನು ತಡೆಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R