


ಹಳೇದರೋಜಿ, 07 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕಂಪ್ಲಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆರಂಭಗೊಂಡು, ಸುಮಾರು 20 ಕಿ.ಮೀ. ಕ್ರಮಿಸಿ ಸಂಡೂರಿನ ಹಳೇದರೋಜಿಯಲ್ಲಿ ಸಮಾಪ್ತಿಯಾಯಿತು.
ಪಾದಯಾತ್ರೆಯುದ್ದಕ್ಕೂ ಪ್ರತಿಯೊಂದು ಗ್ರಾಮದಲ್ಲೂ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಅದ್ದೂರಿ ಸ್ವಾಗತ ನೀಡಿದರು. ಬಿಸಿಲಿನ ನಡುವೆಯೂ ಜನರ ಉತ್ಸಾಹ ಕುಗ್ಗಲಿಲ್ಲ. ಪಾದಯಾತ್ರೆ ಸಾಗಿದಂತೆಲ್ಲಾ ಜನರು ಸ್ವಯಂಪ್ರೇರಿತರಾಗಿ ಹೆಜ್ಜೆ ಹಾಕಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.
ಪಾದಯಾತ್ರೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಪಾಲ್ಗೊಂಡು ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕಿದರು. ಬಳಿಕ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಬಳ್ಳಾರಿ ಚಲೋ’ ಕೇವಲ ಬಿಜೆಪಿ ನಡೆಸುತ್ತಿರುವ ರಾಜಕೀಯ ಪಾದಯಾತ್ರೆಯಲ್ಲ; ರಾಜ್ಯದ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ನಡೆಯುತ್ತಿರುವ ಜನಾಂದೋಲನ ಎಂದು ಹೇಳಿದರು.
“ಕಳೆದ ಏಳು ದಿನಗಳಿಂದ ವಿಜಯೇಂದ್ರ ಅವರು ಬಿಸಿಲು, ಮಳೆ ಎನ್ನದೆ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ಅವರ ಪ್ರತಿಯೊಂದು ಹೆಜ್ಜೆಯೂ ಜನರ ಸಮಸ್ಯೆಗಳ ಪರವಾದ ಹೋರಾಟದ ಸಂಕೇತವಾಗಿದೆ. ದಿನದಿಂದ ದಿನಕ್ಕೆ ಪಾದಯಾತ್ರೆಗೆ ಹೆಚ್ಚುತ್ತಿರುವ ಜನಬೆಂಬಲವೇ ಸರ್ಕಾರದ ವಿರುದ್ಧ ಜನರಲ್ಲಿ ಮೂಡಿರುವ ಅಸಮಾಧಾನಕ್ಕೆ ಸಾಕ್ಷಿ,” ಎಂದು ರಾಘವೇಂದ್ರ ಹೇಳಿದರು.
ಕಾಂಗ್ರೆಸ್ ಸರ್ಕಾರ ಹಲವು ಭರವಸೆಗಳನ್ನು ನೀಡಿದ್ದರೂ ರೈತರು, ಯುವಕರು, ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಜನರ ಧ್ವನಿಯನ್ನು ಆಲಿಸುವ ಬದಲು ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.
“ವಿಜಯೇಂದ್ರ ಅವರ ಹೋರಾಟ ಅಧಿಕಾರಕ್ಕಾಗಿ ನಡೆಯುತ್ತಿರುವ ಹೋರಾಟವಲ್ಲ. ರಾಜ್ಯದ ಜನರ ಹಿತಕ್ಕಾಗಿ, ರೈತರ ಬದುಕಿಗಾಗಿ, ಯುವಕರ ಭವಿಷ್ಯಕ್ಕಾಗಿ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟ. ಈ ಹೋರಾಟಕ್ಕೆ ಜನರ ಆಶೀರ್ವಾದ ಮತ್ತು ಬೆಂಬಲ ಮತ್ತಷ್ಟು ಶಕ್ತಿ ನೀಡುತ್ತಿದೆ,” ಎಂದು ರಾಘವೇಂದ್ರ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್