
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.17 ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.
ಎಲ್ಲರೂ ಭಾಗವಹಿಸಿ ಆಚರಿಸಿದರೆ ಜಯಂತಿ ಕಾರ್ಯಕ್ರಮಗಳಿಗೆ ಮೆರಗು. ಹಾಗಾಗಿ ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದ ಅವರು, ವೇದಿಕೆ ಮತ್ತು ಮೆರವಣಿಗೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸೆ.17 ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಬೆಂಗಳೂರು ರಸ್ತೆ, ಹಳೇ ಬ್ರೂಸ್ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡಿರುತ್ತವೆ ಎಂದು ಅವರು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು ಎಂದು ಅವರು ತಿಳಿಸಿದರು.
ನಗರದಲ್ಲಿ ಬ್ಯಾನರ್, ಪಟಾಕಿ, ಧ್ವನಿವರ್ಧಕ ಹಾಗೂ ಬೈಕ್ ರ್ಯಾಲಿಗಳನ್ನು ನಿಷೇಧಿಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು.
ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಸಲಹೆ-ಅಭಿಪ್ರಾಯ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್