ನವದೆಹಲಿ, 24 ಏಪ್ರಿಲ್ (ಹಿ.ಸ):ಆ್ಯಂಕರ್: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಅಮೆರಿಕದ ಚಿಕಾಗೋದಲ್ಲಿ ಮಾತನಾಡಿದ ಅವರು, ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಬಹುದು ಎಂದು ಹೇಳಿದ್ದಾರೆ.
ವ್ಯಕ್ತಿಯೊಬ್ಬ 100 ಮಿಲಿಯನ್ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ. ಭಾರತದಲ್ಲಿ ಕನಿಷ್ಠ ವೇತನ ಇಲ್ಲ. ಬಡವರಿಗೆ ಇಷ್ಟು ಹಣವನ್ನು ನೀಡಬೇಕು ಎಂದು ಕಾನೂನು ತಂದರೆ ಅದು ಸಂಪತ್ತಿನ ಮರು ಹಂಚಿಕೆ ಎಂದರು.
ಇಂದು ಶ್ರೀಮಂತರು ತಮ್ಮ ಮನೆಯ ಸಹಾಯಕರಿಗೆ ಹಣವನ್ನು ನೀಡುವುದಿಲ್ಲ. ಆದರೆ ಅವರು ದುಬೈ ಮತ್ತು ಲಂಡನ್ನಲ್ಲಿ ವಿಹಾರಕ್ಕೆ ಆ ಹಣವನ್ನು ಖರ್ಚು ಮಾಡುತ್ತಾರೆ. ನಮ್ಮ ಸಂಪತ್ತನ್ನು ಸಾರ್ವಜನಿಕರಿಗಾಗಿ ಬಿಟ್ಟುಬಿಡಬೇಕು ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್