ಕೊಪ್ಪಳ, 25 ಏಪ್ರಿಲ್ (ಹಿ.ಸ):
ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ-1098 ಘಟಕವು ಕಾರ್ಯನಿರ್ವಹಿಸುತ್ತಿದ್ದು, ಗುರುವಾರ ಜಿಲ್ಲಾಡಳಿತ ಭವನ ಸಂಕೀರ್ಣದಲ್ಲಿರುವ ಘಟಕದ ಕಚೇರಿಯಲ್ಲಿ ತತಕ್ಷಣದ ತುರ್ತು ಪ್ರತಿಕ್ರಿಯೆ (ಇ.ಆರ್.ಎಸ್.ಎಸ್) ತಂತ್ರಾಂಶದಲ್ಲಿ ಪ್ರಕರಣವನ್ನು ನಮೂದಿಸುವ ಮೂಲಕ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಹಾಯವಾಣಿ ಘಟಕದ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾರೆ.
ಈ ಮಕ್ಕಳ ಸಹಾಯವಾಣಿಗೆ ಸಂಕಷ್ಟದಲ್ಲಿರುವ ಮಕ್ಕಳು ಕಂಡುಬಂದಲ್ಲಿ ಯಾವುದೇ ವ್ಯಕ್ತಿ ಅಥವಾ ಮಗು ಉಚಿತವಾಗಿ ಕರೆ ಮಾಡಬಹುದಾಗಿದೆ. ಪ್ರಸ್ತುತ ಮಕ್ಕಳ ಸಹಾಯವಾಣಿಯು ರಾಷ್ಟ್ರೀಯ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ-112ರ (ಇ.ಆರ್.ಎಸ್.ಎಸ್) ಸಹಯೋಗದೊಂದಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಕರೆ ಮಾಡಿ ಮಾಹಿತಿಯನ್ನು ನೀಡಿದ 60 ನಿಮಿಷದೊಳಗಾಗಿ ಸ್ಥಳಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿ ಅಗತ್ಯ ನೆರವು, ಸಹಕಾರ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಾರೆ. ಈ ಸಹಾಯವಾಣಿಯು ದಿನದ 24 ಘಂಟೆ ಮತ್ತು ವಾರದ 7 ದಿನಗಳು ಕಾರ್ಯನಿರ್ವಹಿಸುತ್ತದೆ. ಸಂಕಷ್ಟಕರ ಪರಿಸ್ಥಿತಿಯಲ್ಲಿರುವ ಮಕ್ಕಳು ಕಂಡುಬಂದಲ್ಲಿ ತಕ್ಷಣ 1098/ 112ಗೆ ಉಚಿತ ಕರೆ ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಗಂಗಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹಾಗೂ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ರಮೇಶ ಗಾಣಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಡಿಎಚ್ಒ ಡಾ. ಲಿಂಗರಾಜ ಟಿ., ನಿರೂಪಣಾಧಿಕಾರಿ ಗಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ಹುಬಕಡ್ಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ನಿಲೋಫರ್ ಎಸ್. ರಾಂಪುರಿ, ಯುನಿಸೆಫ್- ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ. ಕೆ.ರಾಘವೇಂದ್ರ ಭಟ್, ವ್ಯವಸ್ಥಾಪಕರಾದ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಮಕ್ಕಳ ಸಹಾಯವಾಣಿ-1098, ಬಾಲ ಮಂದಿರಗಳ ಅಧೀಕ್ಷಕರು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.