ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮ: ಎಂ.ಎಸ್.ದಿವಾಕರ
ಹೊಸಪೇಟೆ, 02 ಮೇ (ಹಿ.ಸ): ಆ್ಯಂಕರ್ : ಬೇಸಿಗೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರ
ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮವಹಿಸಿ: ಎಂ.ಎಸ್.ದಿವಾಕರ


ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮವಹಿಸಿ: ಎಂ.ಎಸ್.ದಿವಾಕರ


ಕುಡಿವ ನೀರು, ಮೇವು ಪೂರೈಕೆಗೆ ಅಗತ್ಯ ಕ್ರಮವಹಿಸಿ: ಎಂ.ಎಸ್.ದಿವಾಕರ


ಹೊಸಪೇಟೆ, 02 ಮೇ (ಹಿ.ಸ):

ಆ್ಯಂಕರ್ : ಬೇಸಿಗೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಮೇ 2ರಂದು ಜಿಲ್ಲಾಡಳಿತ ಭವನದಲ್ಲಿನ ಕೇಶ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು. ಕೂಡ್ಲಿಗಿ ತಾಲೂಕಿನ 33 ಗ್ರಾಮಗಳಲ್ಲಿ 36 ಖಾಸಗಿ ಬೋರವೆಲ್, ಕೊಟ್ಟೂರ ತಾಲೂಕಿನಲ್ಲಿ 11 ಗ್ರಾಮಗಳಲ್ಲಿ 15 ಖಾಸಗಿ ಬೋರವೆಲ್, ಹರಪನಹಳ್ಳಿ ತಾಲೂಕಿನಲ್ಲಿ 85 ಗ್ರಾಮಗಳಲ್ಲಿ 111 ಖಾಸಗಿ ಬೋರವೆಲ್, ಹೊಸಪೇಟೆ ಗ್ರಾಮೀಣ ಪ್ರದೇಶದ 13 ಹಳ್ಳಿಗಳಲ್ಲಿ 18 ಖಾಸಗಿ ಬೋರವೆಲ್, ಹಡಗಲಿ ತಾಲೂಕಿನ 19 ಗ್ರಾಮಗಳಲ್ಲಿ 23 ಖಾಸಗಿ ಬೋರವೆಲ್ಗಳು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ 32 ಗ್ರಾಮಗಳಲ್ಲಿ 41 ಖಾಸಗಿ ಬೋರವೆಲ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಸಭೆಗೆ ತಿಳಿಸಿದರು.

ಕಾಲಕಾಲಕ್ಕೆ ಈ ಖಾಸಗಿ ಬೋರವೆಲ್ಗಳಿಗೆ ಮಾಸಿಕ ಬಾಡಿಗೆ ವೆಚ್ಚವನ್ನು ಪಾವತಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಮೇವಿನ ಲಭ್ಯತೆಯ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೂಡ್ಲಿಗಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲಾಗಿರುತ್ತದೆ. ಅದರ ಮೂಲಕ 43,740 ಕೆ.ಜಿ.ಮೇವನ್ನು ರೈತರಿಗೆ ವಿತರಿಸಲಾಗಿದೆ ಎಂದು ತಹಸೀಲ್ದಾರರು ಸಭೆಗೆ ಮಾಹಿತಿ ನೀಡಿದರು. ಅದೇ ರೀತಿ ಕೂಡ್ಲಿಗಿ ತಾಲೂಕಿನ ಗಂಡಬಮ್ಮನಳ್ಳಿ ಪಂಚಾಯಿತಿಯಲ್ಲಿ ಗೋಶಾಲೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ಈ ಗೋಶಾಲೆಗೆ ಸೂಕ್ತವಾದ ಶೆಡ್ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ತಹಸೀಲ್ದಾರರು ಮತ್ತು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಪ್ರದೇಶಗಳಲ್ಲಿ ಯಾವುದೇ ವಾರ್ಡಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ನೀರನ್ನು ಶುಚಿಗೊಳಿಸಿ ಸರಬರಾಜು ಮಾಡಲು ಎಲ್ಲಾ ಪುರಸಭೆ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ತಿಳಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯುಕ್ತರಾದ ಚಂದ್ರಪ್ಪ ಅವರಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ: ಜಿಲ್ಲೆಯಲ್ಲಿ ಇನ್ನೂ ವಾರದಮಟ್ಟಿಗೆ ಬಿಸಿ ಗಾಳಿ (ಹೀಟ್ ವೇವ್) ಹೆಚ್ಚಾಗುವ ಸಾಧ್ಯತೆ ಇದ್ದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗು ತಮ್ಮ ಪಂಚಾಯಿತಿ ಮತ್ತು ಗ್ರಾಮಮಟ್ಟದಲ್ಲಿ ಜಾನುವಾರುಗಳಿಗೆ ಸೂಕ್ತವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ ಸದಾಶಿವ ಪ್ರಭು ಜಿ., ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಪೋಮ್ ಸಿಂಗ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಪೂಜಾರಿ, ನಗರ ನೀರು ಸರಬರಾಜು ಮತ್ತು ಕೊಳಚೆ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಲ್ಲಿಕಾರ್ಜುನ ಪಾಟೀಲ ಹಾಗೂ ಕಂದಾಯ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.


 rajesh pande