
ವಿಜಯಪುರ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಾಯವಾಗುತ್ತಿದ್ದು, ವಿಶ್ವದ ಮಟ್ಟದಲ್ಲಿ ಈ ಯೋಜನೆಗಳು ದಾಖಲೆಯನ್ನೂ ನಿರ್ಮಿಸಿವೆ ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬಾಗಲಕೋಟೆ ಜಿಲ್ಲಾಡಳಿತ ಆವರಣದ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ನೂತನ ಜಿಲ್ಲಾ ಅಧ್ಯಕ್ಷರಾಗಿ ಅನಿಲಕುಮಾರ ದಡ್ಡಿ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಪ್ರತಿ ತಿಂಗಳು ರೂ.೧೨೧ ಕೋಟಿ ಮೊತ್ತದ ಹಣ ಯೋಜನೆಗಳಿಗೆ ಬಳಕೆಯಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಯೋಜನೆಗಳ ಅನುಷ್ಠಾನ ಮತ್ತು ಅವುಗಳಿಂದ ದೊರೆಯುವ ಉಪಯೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಬೀಳಗಿ ಶಾಸಕ ಜೆ.ಟಿ. ಪಾಟೀಲ್ ಮಾತನಾಡಿ, ಕೇವಲ ಕಛೇರಿಯ ಮಟ್ಟದಲ್ಲಿ ಸಭೆ ನಡೆಸುವುದರಿಂದ ಫಲಿತಾಂಶ ಸಿಗದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿದರೆ ಹೆಚ್ಚು ಪರಿಣಾಮಕಾರಿ ಫಲ ಸಿಗುತ್ತದೆ. ತಾಲೂಕು ಅಧ್ಯಕ್ಷರು ತಮ್ಮ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕು, ಎಂದು ಸಲಹೆ ನೀಡಿದರು. ಇದೇ ವೇಳೆ, ತಾಲೂಕು ಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿದ ಮೊದಲ ಅಧ್ಯಕ್ಷರಿಗೆ ವೈಯಕ್ತಿಕವಾಗಿ ರೂ.೨೫ ಸಾವಿರ ಬಹುಮಾನ ಘೋಷಿಸಿದರು.
ನೂತನ ಅಧ್ಯಕ್ಷ ಅನಿಲಕುಮಾರ ದಡ್ಡಿ ಅಧಿಕಾರ ಸ್ವೀಕರಿಸಿ ಮಾತನಾಡಿದ ವೇಳೆ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಪದಾಧಿಕಾರಿಗಳ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಸದುಪಯೋಗ ತಲುಪುವಂತೆ ಶ್ರಮಿಸುತ್ತೇನೆ, ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ಸೇರಿದಂತೆ ತಾಲೂಕು ಪದಾಧಿಕಾರಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande