
ಕೋಲಾರ, ೨೯ ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯ ನಂತರ ಮುಖ್ಯಮಂತ್ರಿಗಳು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಭರಪೂರ ಅನುದಾನವನ್ನು ಒದಗಿಸಿದ್ದಾರೆ. ಕೋಲಾರದಲ್ಲಿ ಒಟ್ಟು ೧೦೩.೩೯೭೫ ಕೋಟಿ ಅನುದಾನದಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ತಿಳಿಸಿದ್ದಾರೆ.
ಕೋಲಾರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಉನ್ನತ ಶಿಕ್ಷಣ ಇಲಾಖೆ, ಸರ್ಕಾರ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾದ ನೂತನ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರಿ ಮಹಿಳಾ ಕಾಲೇಜು ಅಭಿವೃದ್ಧಿ (ಕೋಲಾರ ನಗರ) ಕ್ಕೆ ರೂ.೪೨.೬೭ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಮೊದಲ ಹಂತದಲ್ಲಿ ೨೦.೧೭ ಕೋಟಿ, ಎರಡನೇ ಹಂತದಲ್ಲಿ ೨೦ ಕೋಟಿ, ಮತ್ತು ಮೂರನೇ ಹಂತದಲ್ಲಿ ಪಿಜಿ ಬ್ಲಾಕ್ ಹಾಗೂ ಸೈನ್ಸ್ ಬ್ಲಾಕ್ನ ಮೊದಲ ಮತ್ತು ಎರಡನೇ ಮಹಡಿಗಳ ನಿರ್ಮಾಣಕ್ಕಾಗಿ ೨.೫ ಕೋಟಿ ಅನುದಾನ ಮೀಸಲಿಡಲಾಗಿದೆ.
ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ನಿಖರವಾಗಿ ೬.೮೨೭೫ ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಈ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸರ್ಕಾರದ ದೀಪಿಕಾ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಉತ್ತರ ವಿ.ವಿ. ವ್ಯಾಪ್ತಿಯ ಮಂಗಸಂದ್ರ ಪಿ.ಜಿ. ಮಹಿಳಾ ವಸತಿ ನಿಲಯಕ್ಕಾಗಿ ೧೨.೫ ಕೋಟಿ, ಪ್ರಧಾನಮಂತ್ರಿ ’ಉಷಾ’ ಯೋಜನೆಯಡಿ ೧೦ ಕೋಟಿ ಮತ್ತು ಮೊದಲನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ೨.೫ ಕೋಟಿ ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ಹಾಕಲಾಗಿದೆ.
ಈ ವಿಶ್ವವಿದ್ಯಾಯಕ್ಕೆ ಸುವರ್ಣ ಗಂಗೆ ಎಂದು ನಾಮಕರಣ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವರ ದೂರದೃಷ್ಟಿ ಮತ್ತು ಆಶಯ: ಸಚಿವರು ತಾವು ಕೈಗೊಳ್ಳುವ ಕಾಮಗಾರಿಗಳು ಕೇವಲ ಇಂದಿನ ಅಗತ್ಯಗಳನ್ನು ಪೂರೈಸುವುದಲ್ಲ, ಬದಲಾಗಿ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ದೂರದೃಷ್ಟಿಯಿಂದ ನಿರ್ಮಾಣವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ತಿಳಿಸಿದರು. ಈ ಸರ್ಕಾರಿ ಸಂಸ್ಥೆಗಳ ಕಟ್ಟಡಗಳು ಮತ್ತು ಸೌಲಭ್ಯಗಳು ಯಾವುದೇ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಇರಬೇಕು ಎಂದು ಸ್ಪಷ್ಟಪಡಿಸಿದರು.
ಅಲ್ಲದೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ೨೪ ವಿಧಾನಸಭಾ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಅಮರಾವತಿ ಬಳಿ ೧೬೦ ಎಕರೆ ವಿಸ್ತೀರ್ಣದಲ್ಲಿ ಉತ್ತಮ ಕ್ಯಾಂಪಸ್ ನಿರ್ಮಾಣವಾಗುತ್ತಿರುವುದು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ನೆರವಾಗಲಿದೆ ಎಂದರು.
ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ: ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು, ಸರ್ಕಾರ ಮತ್ತು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರದೊಂದಿಗೆ ಪ್ರತಿ ವರ್ಷವೂ ಉತ್ತೀರ್ಣರಾಗುವ ವಿದ್ಯಾರ್ಥಿನಿಯರಿಗೆ ರೂ ೩೦,೦೦೦ ವಿದ್ಯಾರ್ಥಿವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ ೩೭ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಪ್ರತಿ ವರ್ಷ ೫ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲು ಯೋಜಿಸಲಾಗುತ್ತಿದೆ. ಕಾಲೇಜುಗಳ ಜೊತೆಗೆ, ಜಿಲ್ಲೆಯ ಇತರೆ ಮೂಲಸೌಕರ್ಯಗಳಿಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ, ಅಂತರ ಗಂಗೆಯಿಂದ ಕೋಲಾರಮ್ಮ ಕೆರೆವರೆಗೂ ೧೦೦ ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಕೋಲಾರ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು ತಮ್ಮ ಸ್ವಂತ ಜಿಲ್ಲೆಯಂತೆ ವಿಶೇಷ ಅನುದಾನ ನೀಡಲಿದ್ದಾರೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ ಅವರು ಮಾತನಾಡಿ ಕೋಲಾರದ ೮ ಕಾಲೇಜುಗಳ ವಿವಿಧ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇವೆ. ಕೋಲಾರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸುವುದು ನಮ್ಮ ಗುರಿಯಾಗಿದೆ.
ಈ ಜಿಲ್ಲೆ ವಿದ್ಯೆಯಲ್ಲಿ ಮುಂಚೂಣಿಯಲ್ಲಿದ್ದು, ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಲ್ಲಿ ೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಾಧೀಶರ ಹುದ್ದೆ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಿ ಉತ್ತಮ ಅಂಕ ಗಳಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಅಲ್ಲದೆ, ಓದಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಹಾಗೂ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಯಬೇಕು ಸರ್ಕಾರ ಕೋಲಾರ ಜಿಲ್ಲೆಗೆ ಈವರೆಗೆ ಸಾವಿರ ಕೋಟಿ ಅನುದಾನ ನೀಡಿದೆ. ಇದೀಗ ೧೦೦ ಕೋಟಿ ವೆಚ್ಚದಲ್ಲಿ ಅಂತರಗಂಗೆ-ಕೋಲಾರ ನಡುವಿನ ಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಪರಿಶ್ರಮದಿಂದ ಇದೀಗ ೧೦೩ ಕೋಟಿಗೂ ಅಧಿಕ ಅನುದಾನ ವಿವಿಧ ಕಾಲೇಜು, ವಿಶ್ವವಿದ್ಯಾಲಯಗಳ ಕಟ್ಟದ ಕಾಮಗಾರಿಗಳಿಗೆ ದೊರೆತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಸಚಿವರುಗಳಿಗೆ ಅಭಿನಂದನೆ ಸಲ್ಲಿಸಿ, ನಗರದ ಹೃದಯ ಭಾಗದಲ್ಲಿರುವ ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇನ್ನೂ ನೂರು ಕೋಟಿಗೂ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ವಿದ್ಯಾವಂತರನ್ನು ನಿರ್ಮಿಸಲಿದ್ದೇವೆ ಎಂದು ಆಶಯ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆಯು ಈಗಾಗಲೇ ಅನೇಕ ವಕೀಲರನ್ನು ಮತ್ತು ನ್ಯಾಯಾಧೀಶರನ್ನು ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯು ಸಂಪೂರ್ಣ ವಿದ್ಯಾವಂತ ಜಿಲ್ಲೆಯಾಗಲಿದೆ. ರೈತರಿಗೆ ಉತ್ತಮ ಬೆಲೆ, ಆರೋಗ್ಯ, ಶಿಕ್ಷಣ ಹಾಗೂ ಉದ್ಯೋಗಕ್ಕೆ ಒತ್ತು ನೀಡಿದರು ಯಾರೋಬ್ಬರು ಸಹ ಜನಪ್ರತಿನಿಧಿಗಳ ಹತ್ತರ ನೆರವಿಗೆ ಬರವುದಿಲ್ಲ ಎಂದರು.
ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎಲ್ಲಾ ಸಿಂಡಿಕೇಟ್ ಸದಸ್ಯರು, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ವಾನಳ್ಳಿ, ಕುಲಸಚಿವರು ಸಿ.ಎನ್ ಶ್ರೀಧರ್, ಮೌಲ್ಯಮಾಪನ ಕುಲಸಚಿವರು ಲೋಕನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ನಿಖಿಲ್, ಉನ್ನತ ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ರಾಮಕೃಷ್ಣ ರೆಡ್ಡಿ, ಉಪ ವಿಭಾಗಾಧಿಕಾರಿ ಡಾ|| ಹೆಚ್.ಪಿ.ಎಸ್.ಮೈತ್ರಿ, ತಹಸೀಲ್ದಾರ್ ಡಾ. ನಯನ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ, ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಶಕರು, ಬೋಧಕ ವರ್ಗ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಉನ್ನತ ಶಿಕ್ಷಣ ಇಲಾಖೆ, ಸರ್ಕಾರ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾದ ನೂತನ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ಭಾಗವಹಿಸಿ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್