

ಬಳ್ಳಾರಿ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳು, ವಾಣಿಜ್ಯ ಮತ್ತು ನಿಗಮ ಮಂಡಳಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಪತ್ರ ವ್ಯವಹಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ಭಾಷೆ ಮತ್ತು ಅನುಷ್ಠಾನದ ಬಗ್ಗೆ ಕನ್ನಡ ಜಾಗೃತಿ ಸಮಿತಿಯು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ ಅಧಿಕೃತವಾಗಿ ನಮಗೆ ವರದಿ ನೀಡಬೇಕು. ಈ ಕಾನೂನನ್ನು ಪಾಲಿಸದೇ ಇರುವ ಸಂಸ್ಥೆಗಳು ಅಥವಾ ಇಲಾಖೆಗಳ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಎಲ್ಲಾ ಇಲಾಖೆಗಳು, ನಗರ ಸ್ಥಳಿಯ ಸಂಘ-ಸಂಸ್ಥೆಗಳು, ವಾಣಿಜ್ಯ ಮಂಡಳಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕನ್ನಡ ಅನುಷ್ಠಾನ ಮತ್ತು ಬಳಕೆಯ ಬಗ್ಗೆ ಪ್ರತಿ ತಿಂಗಳು ಮಾಸಿಕ ವರದಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಕಚೇರಿಯ ನಾಮಫಲಕ, ವಾಣಿಜ್ಯ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ಮಾರ್ಗಸೂಚಿ, ವಿಭಾಗಗಳು, ವ್ಯವಹಾರ ಕಡತಗಳಲ್ಲಿ ಕನ್ನಡ ಬಳಕೆಯ ಬಗ್ಗೆ ಪರಿಶೀಲನೆ ಮಾಡಬೇಕು ಹಾಗೂ ಪಾಲಿಸದೇ ಇರುವ ಸಂಸ್ಥೆಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ವಿವಿಧ ಸ್ಥಳಗಳಲ್ಲಿ ಅಳವಡಿಸುವ ಜಾಹಿರಾತು ಬ್ಯಾನರ್ಗಳು ಕನ್ನಡ ಬಳಕೆ, ಪ್ಲಾಸ್ಟಿಕ್ ಗುಣಮಟ್ಟ ವಿವಿಧ ರೀತಿಯಲ್ಲಿ ಪರಿಶೀಲಿಸಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕು. ಹೋಟೆಲ್ ಮತ್ತು ಕಾರ್ಖಾನೆಗಳಲ್ಲಿ ಕನ್ನಡ ನಾಮಫಲಕ ಮತ್ತು ಮಾರ್ಗಸೂಚಿಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಬೇಕು. ಕನ್ನಡ ಬಳಕೆ ಇಲ್ಲವಾದಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಬೇಕು. ಮೊದಲ ತ್ರೈಮಾಸಿಕದಲ್ಲಿ ಕನ್ನಡ ಜಾಗೃತಿ ವಾರ ಸಪ್ತಾಹ ಮತ್ತು 15 ದಿನಗಳ ಕನ್ನಡ ಅಭಿಯಾನ ಕೈಗೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಸಾಹಿತ್ಯ ಸಾಂಸ್ಕøತಿಕ ಚಟುವಟಿಕೆಗಳು, ವಿಚಾರಗೋಷ್ಠಿ, ಕನ್ನಡ ಸಂವಾದ, ವಿಚಾರ ಸಂಕೀರ್ಣ ಮತ್ತು ವಿವಿಧ ಜಯಂತಿ ದಿನಾಚರಣೆಗಳಲ್ಲಿ ವಿವಿಧ ಸ್ಪರ್ಧೆ ನಡೆಸಿ ಕನ್ನಡ ಪುಸ್ತಕಗಳನ್ನು ನೀಡಲಾಗುತ್ತಿದೆ. ಗಡಿನಾಡು ಪ್ರದೇಶಗಳಲ್ಲಿ ಆಚರಿಸುವ ಕನ್ನಡ ಉತ್ಸವ ಕಾರ್ಯಕ್ರಮಕ್ಕೆ ಪೆÇ್ರೀತ್ಸಾಹ ಧನ ಸಹ ನೀಡಲಾಗುತ್ತಿದ್ದು, ಹೆಚ್ಚಿನ ಕನ್ನಡ ಚಟುವಟಿಕೆ ನಡೆಸಲು ರೂಪುರೇಷೆ ಸಿದ್ಧಪಡಿಸಿ ಹೆಚ್ಚಿನ ಅನುದಾನಕ್ಕಾಗಿ ಪ್ರಾಧಿಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಕನ್ನಡ ಜಾಗೃತಿ ಸಮಿತಿ ಸಭೆ ಕಡ್ಡಾಯವಾಗಿ ಕರೆಯಿರಿ:
ಆಡಳಿತದಲ್ಲಿ ಕನ್ನಡ ಕಡ್ಡಾಯ ಅನುಷ್ಠಾನಕ್ಕಾಗಿ ಪರಾಮರ್ಶೆ ನಡೆಸಲು ಪ್ರತಿ ಮೂರು ತಿಂಗಳಿಗೊಮ್ಮೆ ತಾಲ್ಲೂಕು ಮತ್ತು ಪಂಚಾಯತಿ ಮಟ್ಟದಲ್ಲಿ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷÀತ್ತಿನ ಅಧ್ಯಕ್ಷ ನಿಷ್ಠಿ ರುದ್ರಪ್ಪ ಅವರು ಮಾತನಾಡಿ, ಕನ್ನಡ ಕಡ್ಡಾಯದ ಸರ್ಕಾರದ ನಿಯಮಾವಳಿಗಳನ್ನು ಅಧಿಕಾರಿಗಳು ಪಾಲಿಸಬೇಕು. ಬ್ಯಾಂಕುಗಳಲ್ಲಿ ಕನ್ನಡ ವ್ಯವಹಾರ ನಡಿತಿಲ್ಲ. ಕನ್ನಡ ಕಡ್ಡಾಯಗೊಳಿಸಬೇಕೆಂದು ನಿಯಮಗಳಿದ್ದರೂ ಬ್ಯಾಂಕುಗಳು ಇದನ್ನು ಪಾಲಿಸುತ್ತಿಲ್ಲ. ಕನ್ನಡೇತರರ ನೇಮಕಾತಿಯಿಂದ ಈ ಸಮಸ್ಯೆ ಇನ್ನು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್ಗಳಲ್ಲಿ ಶೀಘ್ರವೇ ಕನ್ನಡ ಕೋಶ ಎಂಬ ಕಾರ್ಯಕ್ರಮವನ್ನು ನಡೆಸಬೇಕು. ಬ್ಯಾಂಕರ್ಸ್ ಸಭೆ ಕರೆದು ಕನ್ನಡ ಅನುಷ್ಠಾನಕ್ಕೆ ನಿರ್ದೇಶನ ನೀಡಬೇಕು ಎಂದು ಸಭೆಗೆ ತಿಳಿಸಿದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸಬೇಕಾದರೆ ಕನ್ನಡಿಗರು ಇಲ್ಲಿರಬೇಕು. ಇದಕ್ಕಾಗಿ ಕನ್ನಡಿಗರು ನೇಮಕಾತಿ ಹೊಂದುವಂತೆ ಸ್ಥಳೀಯ ಸಂಪನ್ಮೂಲಗಳಿಂದ ಸೂಕ್ತ ತರಬೇತಿ ನೀಡುವತ್ತ ಜಿಲ್ಲಾಡಳಿತ ಗಮನಹರಿಸಬೇಕು ಎಂದರು.
ಜಿಲ್ಲೆಯ ಕೈಗಾರಿಕಾ ವಲಯ, ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿ ಅನ್ಯಭಾಷಿಕರೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸ್ಥಳಿಯ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲಾ ಮಟ್ಟದ ನ್ಯಾಯಾಲಗಳು ಮತ್ತು ಅರೆಕಾಲಿಕ ನ್ಯಾಯಾಲಗಳು ಸೇರಿದಂತೆ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ವಿಚಾರಣೆಗೆ ಒಳಪಡುವ ಕಂದಾಯ ಪ್ರಕರಣಗಳ ಕುರಿತಂತೆ ನ್ಯಾಯಾಲಯದ ತೀರ್ಪುಗಳನ್ನು ಕನ್ನಡದಲ್ಲಿಯೆ ಹೊರಡಿಸಬೇಕು. ಜಿಲ್ಲೆಯಲ್ಲಿರುವ ಗಡಿನಾಡು ಕನ್ನಡ ಶಾಲೆಗಳ ಅಭಿವೃದ್ಧಿ ಮತ್ತು ಕೇಂದ್ರ ಸರಕಾರದ ಕೇಂದ್ರಿಯ ವಿದ್ಯಾಲಯಗಳು ಮತ್ತು ಸಿಬಿಎಸ್ಇ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯವಾಗಿ ಬೋಧನೆ ಮತ್ತು ಕನ್ನಡ ಭಾಷೆ ಮಾತನಾಡಬೇಕು. ಇದರ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಕನ್ನಡ ಜಾಗೃತಿ ಸಮಿತಿಯ ಸದಸ್ಯರು ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಡಾ.ಎ.ಸಿ ದಾನಪ್ಪ, ಅಂಬಿಗರ ಮಂಜುನಾಥ, ರಾಧಾ, ಡಾ.ತಿಪ್ಪೇರುದ್ರ, ಅಲಂ ಭಾಷಾ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್