
ನವದೆಹಲಿ, 24 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಅಧಿಕಾರ ಹಂಚಿಕೆ ವಿಷಯದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರಿಗೆ ಯಾವುದೇ ರೀತಿಯ ತೊಂದರೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ರಾಹುಲ್ ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ಪಕ್ಷದ ಶಿಸ್ತಿಗೆ ಬದ್ಧನಾಗಿ ಕಾರ್ಯಕರ್ತನಾಗಿಯೇ ಇರಲು ಇಷ್ಟಪಡುತ್ತೇನೆ ಎಂದು ಹೇಳಿದರು. ದೆಹಲಿಯಲ್ಲಿ ತಾವು ಯಾರನ್ನೂ ಭೇಟಿ ಮಾಡಿಲ್ಲ. ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಮರಳಿರುವ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಅವರನ್ನು ಸಂಪರ್ಕಿಸುವ ಉದ್ದೇಶವೂ ಇಲ್ಲ ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳನ್ನು ತಳ್ಳಿ ಹಾಕಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಬ್ರೇಕ್ಫಾಸ್ಟ್ ಮೀಟಿಂಗ್ ಎನ್ನುವುದು ರಾಜಕಾರಣದಲ್ಲಿ ಸಾಮಾನ್ಯ ಪ್ರಕ್ರಿಯೆ. ಎಲ್ಲರ ಜೊತೆಯೂ ಇಂತಹ ಸಭೆಗಳು ನಡೆಯುತ್ತವೆ. ಪವರ್ ಶೇರಿಂಗ್, ಶೇರಿಂಗ್–ಕೇರಿಂಗ್ ಎಲ್ಲವೂ ಸಹಜ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುತ್ತಿರು ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರಿಗೆ ಒಳ್ಳೆಯದಾಗಲಿ ಎಂದು ಶಿವಕುಮಾರ್ ಹೇಳಿದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa