

ಕೊಪ್ಪಳ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ 2026ರ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರೆದ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ 15ರಂದು ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವತ್ರಿಕ ರಜೆ ಇರುವ ಹಿನ್ನೆಲೆಯಲ್ಲಿ ಸಮಾಜದ ಮುಖಂಡರ ಸಲಹೆ ಮೇರೆಗೆ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿಯನ್ನು ಜ. 15ರ ಬದಲಿಗೆ ಜ. 28ಕ್ಕೆ ಆಚರಣೆ ಮಾಡಲಾಗುವುದು.
ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ತಾಲ್ಲೂಕಾ ಕಛೇರಿ, ಗ್ರಾಮ ಪಂಚಾಯತಗಳಲ್ಲಿ, ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಕೇಂದ್ರದಲ್ಲಿ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ಆಚರಣೆಗಾಗಿ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು.
ಜ. 28ರ ಬೆಳಿಗ್ಗೆ 9 ಗಂಟೆಗೆ ನಗರದ ಗವಿಸಿದ್ದೇಶ್ವರ ಮಠದ ಆವರಣದಿಂದ ಅಶೋಕ ವೃತ್ತದ ಬಳಿ ಇರುವ ಸಾಹಿತ್ಯ ಭವನದವರೆಗೆ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಭಾವಚಿತ್ರದ ಮೆರವಣಿಗೆ ಮತ್ತು ಅಂದು ಬೆಳಿಗ್ಗೆ 10.30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ಶಿವಯೋಗಿ ಸಿದ್ರಾಮೇಶ್ವರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ.
ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕಲ್ಪಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲಾ ಸಮಾಜದವರು ಅನುಕೂಲ ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಮತ್ತು ಕೊಪ್ಪಳ ಜಿಲ್ಲಾ ಭೋವಿ ಸಮಾಜದ ಜಿಲ್ಲಾ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು, ತಾಲ್ಲೂಕು ಭೋವಿ ಸಮಾಜದ ಅಧ್ಯಕ್ಷರು, ಸದಸ್ಯರು, ಜಿಲ್ಲೆಯ ಎಲ್ಲಾ ತಾಲೂಕಿನ ಸಮಾಜದ ಮುಖಂಡರು ಸೇರಿದಂತೆ ಇನ್ನೂ ಪ್ರಮುಖರು ಹಾಗೂ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್