ಗದಗ, 25 ಏಪ್ರಿಲ್ (ಹಿ.ಸ.):
ಆ್ಯಂಕರ್:
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡವಾಡ ಗ್ರಾಮದ 82 ವರ್ಷದ ಶಂಕರಪ್ಪ ಕೂಬಿಹಾಳ, 74 ವರ್ಷದ ಶಂಕರಮ್ಮ ಕೂಬಿಹಾಳ ದಂಪತಿ ಈ ಇಳಿವಯದಲ್ಲೂ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಮುದಾಯ ಬದು ನಿರ್ಮಾಣ ಕಾಮಗಾರಿ, ನಾಲಾ ಹೂಳೆತ್ತುವುದು, ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಕಳೆದ ಸುಮಾರು ಹತ್ತು ವರ್ಷಗಳಿಂದ ಜತೆಯಾಗಿಯೇ ಭಾಗವಹಿಸಿ ಯುವಜನತೆ ನಾಚುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಮೂಲಕ ನರೇಗಾ ಕೂಲಿ ಮೊತ್ತದಿಂದ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ತಮ್ಮ ಎರಡು ಎಕರೆ ಖುಷ್ಕಿ ಕೃಷಿಭೂಮಿಯಲ್ಲಿ, ಮತ್ತು ಬೇರೆ ರೈತರ ಜಮೀನುಗಳಲ್ಲಿ ದುಡಿಯುವ ಈ ದಂಪತಿ ಬೇಸಿಗೆ ಕಾಲದಲ್ಲಿ ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಿ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ.
ಈ ಇಳಿವಯಸ್ಸಿನಲ್ಲೂ ಕುಗ್ಗದ ಉತ್ಸಾಹದೊಂದಿಗೆ ಈ ಜೋಡಿ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರನ್ನೂ ಮದುವೆ ಮಾಡಿ ಕೊಟ್ಟಿರುವ ಈ ಹಿರಿಯ ದಂಪತಿ ಎಲ್ಲ ಕೆಲಸಗಳಲ್ಲೂ ಜೊತೆಯಾಗಿಯೇ ಹೋಗುತ್ತಾರೆ. ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ. ನಿಮ್ಮ ಈ ಉತ್ಸಾಹದ ಗುಟ್ಟೇನು ಎಂದು ಪ್ರಶ್ನಿಸಿದರೆ ದಿನಂಪ್ರತಿ ಜೋಳದ ರೊಟ್ಟಿ ಊಟ, ನಿತ್ಯವು ಮೈ ಬಗ್ಗಿಸಿ ದುಡಿಯುವುದು ಕಾರಣ ಎಂದು ನಗುತ್ತಾರೆ.
ಐವತ್ತು ಅರವತ್ತು ವಯಸ್ಸಿಗೆ ಜನರು ಆರೋಗ್ಯದ ವಿಚಾರದಲ್ಲಿ ಹೆಚ್ಚು ಹೈರಾಣಾಗುವ ಇಂದಿನ ದಿನಮಾನಗಳಲ್ಲಿ ಈ ದಂಪತಿಗಳ ಬಳಿ ಯಾವುದೇ ಕಾಯಿಲೆ ಸುಳಿದಿಲ್ಲ. ಕಿವಿಗಳು ಸ್ಪಷ್ಟವಾಗಿ ಕೇಳುತ್ತವೆ. ಕಣ್ಣುಗಳು ನಿಚ್ಚಳವಾಗಿ ಕಾಣಿಸುತ್ತವೆ. ಕೂಲಿ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ. ಆ ಮೂಲಕ ನರೇಗಾ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಇರುವ ಅರ್ಧ ಕೆಲಸ ಪೂರ್ಣ ಕೂಲಿ ಎಂಬ ನಿಯಮವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಯುವಕರು ನಾಚುವಂತೆ ಕಷ್ಟಪಟ್ಟು ಕೆಲಸ ನಿರ್ವಹಿಸಿ ನರೇಗಾ ಕೂಲಿಮೊತ್ತದಿಂದ ಇಳಿವಯಸ್ಸಿನಲ್ಲಿ ಯಾರನ್ನು ನೆಚ್ಚಿಕೊಳ್ಳದೆ ತಮ್ಮ ದುಡಿಮೆಯಿಂದ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.
ಈ ಕುರಿತು ಮುಂಡರಗಿ ತಾಲೂಕು ಪಂಚಾಯತ್ ಇಓ
ವಿಶ್ವನಾಥ ಹೊಸಮನಿ ಅವರು ಮಾತನಾಡಿ,
ಮುಂಡರಗಿ ತಾಲೂಕಿನಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಾ ಅನೇಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಗುಳೆ ಹೋಗುವುದನ್ನು ತಪ್ಪಿಸುವುದರ ಜೊತೆಗೆ ಇಂತಹ ಹಿರಿಯ ನಾಗರಿಕರು ಯೋಜನೆಯ ಕಾಮಗಾರಿ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವುದು ಮಾದರಿ ಎಂದರು.
ಹಿರಿಯ ನರೇಗಾ ಕೂಲಿಕಾರ್ಮಿಕ ದಂಪತಿ
ಶಂಕರಪ್ಪ ಕೂಬಿಹಾಳ, ಶಂಕರವ್ವ ಕೂಬಿಹಾಳ, ಮಾತನಾಡಿ,ದುಡಿಮೆಯೇ ದುಡ್ಡಿನ ತಾಯಿ. ಬೇಸಿಗೆಯಲ್ಲಿ ನಾವು ತಪ್ಪದೆ ನರೇಗಾ ಕಾಮಗಾರಿಯಲ್ಲಿ ಭಾಗವಹಿಸುತ್ತೆವೆ. ಇದು ನಮ್ಮ ದುಡಿಮೆಗೆ ಅನುಕೂಲವಾಗಿದೆ. ಸುಮಾರು ಹತ್ತು ವರ್ಷದಿಂದ ನಾವು ನರೇಗಾ ಯೋಜನೆಯಡಿ ದುಡಿಯುತ್ತೆವೆ, ನರೇಗಾ ಕೆಲಸ ಇಲ್ಲದಾಗ ರೈತರ ಹೊಲದಲ್ಲಿ ಜೊತಿಯಾಗಿ ದುಡಿತೆವೆ ಎಂದಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Lalita MP