ಬಳ್ಳಾರಿ, 14 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದ್ದು, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ ನೋಂದಣಿ ಮಾಡಿದ ರೈತರು ನೋಂದಾಯಿತ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಜೂ.30 ರೊಳಗಾಗಿ ಜೋಳ ಮಾರಾಟ ಮಾಡಬೇಕು.
ಜೋಳದ ಖರೀದಿ ಅವಧಿಯು ಜೂ.30 ಕ್ಕೆ ಕೊನೆ ದಿನವಾಗಿದ್ದು, ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಜೋಳ ಮಾರಾಟ ಮಾಡಲು ನೋಂದಣಿ ಮಾಡಿದ ರೈತರು ಸಂಬಂಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಗ್ರೇನ್ ವೋಚರ್ ಪಡೆದುಕೊಳ್ಳಬೇಕು.
ಖರೀದಿಯಾದ ಜೋಳವನ್ನು ಜೋಳ ಉಪಯೋಗಿಸುವ ಜಿಲ್ಲೆಗಳಿಗೆ ಪಡಿತರ ವಿತರಣೆಗೆ ಹಂಚಿಕೆ ನೀಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವಾಗಿ ನೋಂದಾಯಿತ ರೈತರು ಜೋಳವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ನಂತರ ಖರೀದಿ ಅವಧಿಗೆ ಅವಕಾಶವಿರುವುದಿಲ್ಲ.
ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬಳ್ಳಾರಿಯ ಶಾಖಾ ವ್ಯವಸ್ಥಾಪಕರು ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರು ಹಾಗೂ ಆಯಾ ತಾಲ್ಲೂಕಿನ ತಹಶೀಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್